ಕಲಬುರ್ಗಿ: ‘ಉನ್ನತ ವ್ಯಾಸಂಗಕ್ಕಾಗಿ ಪಡೆದ ಶೈಕ್ಷಣಿಕ ಸಾಲವನ್ನು 371(ಜೆ) ಅಡಿ ಮನ್ನಾ ಮಾಡುವಂತೆ ಒತ್ತಾಯಿಸಿ ಜನವರಿ 2ರಂದು ದೆಹಲಿಗೆ ನಿಯೋಗದೊಂದಿಗೆ ತೆರಳಿ, ಪ್ರಧಾನಿಗೆ ಮನವಿ ಸಲ್ಲಿಸಲಾಗುವುದು’ ಎಂದು ಈಶಾನ್ಯ ವಲಯದ ಶಿಕ್ಷಕರ ವೇದಿಕೆ ಅಧ್ಯಕ್ಷ ಎಂ.ಬಿ ಅಂಬಲಗಿ ತಿಳಿಸಿದರು.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ನಿರುದ್ಯೋಗಿ ಪದವೀಧರರಿಗೆ ಉದ್ಯೋಗ ನೀಡಬೇಕು. ಇಲ್ಲದಿದ್ದರೆ ಸ್ವ ಉದ್ಯೋಗಕ್ಕಾಗಿ ಬಡ್ಡಿರಹಿತ ಸಾಲ ನೀಡಬೇಕು ಎಂದು ಒತ್ತಾಯಿಸಲಾಗುವುದು’ ಎಂದು ಹೇಳಿದರು.
‘ಒಂದು ತಿಂಗಳೊಳಗೆ ಬೇಡಿಕೆಗೆ ಸ್ಪಂದಿಸದಿದ್ದರೆ ದೇವೇಗೌಡರ ನೇತೃತ್ವದಲ್ಲಿ ದೆಹಲಿಯ ಜಂತರಮಂತರ್ನಲ್ಲಿ ಸತ್ಯಾಗ್ರಹ ನಡೆಸಲಾಗುವುದು’ ಎಂದರು.
ಸಂಸದ ಬಸವರಾಜ ಪಾಟೀಲ ಸೇಡಂ ಅವರ ಮೂಲಕ ‘ಕೇಂದ್ರ ಸಚಿವ ಪ್ರಕಾಶ ಜಾವಡೇಕರ್ ಅವರನ್ನು ಭೇಟಿ ಮಾಡಿ ಶೈಕ್ಷಣಿಕ ಸಾಲ ಪಡೆದ 587 ಜನರ ಪಟ್ಟಿ ನೀಡಿ, ಸಾಲದ ಬಡ್ಡಿಯ ಹಣ ಬಿಡುಗಡೆ ಮಡುವಂತೆ ಮನವಿ ಸಲ್ಲಿಸಲಾಗುವುದು. ಮಾಜಿ ಪ್ರಧಾನಿ ಮನಮೋಹನ ಸಿಂಗ್, ರಾಹುಲಗಾಂಧಿ, ಸೋನಿಯಾಗಾಂಧಿ ಮತ್ತು ರಾಜ್ಯದ ಎಲ್ಲ ಸಂಸದರು ಮತ್ತು ಶಾಸಕರಿಗೆ ಮನವಿ ಸಲ್ಲಿಸಲಾಗುವುದು’ ಎಂದರು.
‘ಶೈಕ್ಷಣಿಕ ಸಾಲಕ್ಕೆ ಬ್ಯಾಂಕ್ ಗಳು ದುಬಾರಿ ಬಡ್ಡಿ ವಿಧಿಸುತ್ತಿರುವುದಿಂದ ಬ್ಯಾಂಕುಗಳು ಕೇವಲ ಅಸಲು ಪಡೆಯುವಂತೆ ಮತ್ತು ಮುಂಬರುವ ದಿನಗಳಲ್ಲಿ ಶೇ 4 ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡುವ ವ್ಯವಸ್ಥೆ ಮಾಡಬೇಕು’ ಎಂದು ರಿಸರ್ವ್ ಬ್ಯಾಂಕ್ ಮುಖ್ಯಸ್ಥರಿಗೆ ಮನವಿ ಸಲ್ಲಿಸಲಾಗುವುದು’ ಎಂದು ತಿಳಿಸಿದರು.
ಹೆಚ್ಚಿನ ಮಾಹಿತಿಗೆ ಮೊ:98800 169907 ಸಂಪರ್ಕಿಸಬಹುದು. ಸೂರ್ಯಕಾಂತ ಜೀವಣಗಿ, ರೇವಣಸಿದ್ದಯ್ಯ ಹಿರೇಮಠ, ಶಾಂತಯ್ಯ ಹಿರೇಮಠ, ಮೊಹ್ಮದ್ ಜಾಫರಸಾಬ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.