ಜೇವರ್ಗಿ: ರೈತರ ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡಬೇಕು. ಪ್ರತಿ ಕ್ವಿಂಟಲ್ ತೊಗರಿಗೆ ₹7,500 ಬೆಂಬಲ ಬೆಲೆ ನಿಗದಿಪಡಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ ತಾಲ್ಲೂಕು ಸಮಿತಿ ವತಿಯಿಂದ ಸೋಮವಾರ ಪಟ್ಟಣದ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಲಾಯಿತು.
ಕೃಷಿ ಕ್ಷೇತ್ರದಲ್ಲಿ ಸುಧಾರಣೆ ತರಲು ಡಾ.ಸ್ವಾಮಿನಾಥನ್ ವರದಿ ಶಿಫಾರಸ್ಸುಗಳನ್ನು ಜಾರಿಗೆ ತರಬೇಕು. ಎಲ್ಲಾ ಬಡವರಿಗೆ ಪಡಿತರ ಚೀಟಿ ಮಂಜೂರು ಮಾಡಬೇಕು. ಪ್ರತಿ ಪಡಿತರ ಚೀಟಿಗೆ 50ಕೆ.ಜಿ ಆಹಾರ ಧಾನ್ಯ ವಿತರಿಸಬೇಕು. ಬಗರ್ಹುಕುಂ ಜಮೀನು ಸಾಗುವಳಿ ಮಾಡಿದ ರೈತರಿಗೆ ಸಾಗುವಳಿ ಚೀಟಿ ನೀಡಬೇಕು ಎಂದು ಪ್ರಾಂತ ರೈತ ಸಂಘದ ಮುಖಂಡರು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.
ಈ ಕುರಿತು ತಹಶೀಲ್ದಾರ್ ಯಲ್ಲಪ್ಪ ಸುಬೇದಾರ್ಗೆ ಪ್ರಮುಖ 10 ಬೇಡಿಕೆಗಳ ಮನವಿ ಪತ್ರವನ್ನು ಸರ್ಕಾರಕ್ಕೆ ಸಲ್ಲಿಸಲಾಯಿತು. ಸಿಪಿಐ (ಎಂ) ಹಿರಿಯ ಮುಖಂಡ ವೆಂಕೋಬರಾವ್ ವಾಗಣಗೇರಿ, ಪ್ರಾಂತ ರೈತ ಸಂಘ ತಾಲ್ಲೂಕು ಸಮಿತಿ ಅಧ್ಯಕ್ಷ ಸುಭಾಷ ಹೊಸಮನಿ, ಕಾರ್ಯದರ್ಶಿ ಪರಶುರಾಮ ಬಡಿಗೇರ್, ಖಜಾಂಚಿ ಸಿದ್ಧರಾಮ ಹರವಾಳ, ಮಹಾದೇವ್ ಮಾರಡಗಿ, ಸಿದ್ದಣ್ಣ ನೀರಲಕೋಡ್, ಧೂಳಪ್ಪ ಹರವಾಳ, ಆನಂದಪ್ಪ ಚಿಂಚೋಳಿ ಸೇರಿದಂತೆ ಪ್ರಾಂತ ರೈತ ಸಂಘ ತಾಲ್ಲೂಕು ಸಮಿತಿ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.