ADVERTISEMENT

ಸಿಮೆಂಟ್ ಕಾರ್ಖಾನೆ: ಸ್ಥಳೀಯರಿಗೆ ಉದ್ಯೋಗ ಕಡ್ಡಾಯ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2017, 7:10 IST
Last Updated 29 ಅಕ್ಟೋಬರ್ 2017, 7:10 IST

ಕಲಬುರ್ಗಿ: ‘ಸರೋಜಿನಿ ಮಹಿಷಿ ವರದಿ ಪ್ರಕಾರ ಸ್ಥಳೀಯರಿಗೆ ಹಾಗೂ ಕಾರ್ಖಾನೆಗೆ ಭೂಮಿ ನೀಡಿರುವ ರೈತ ಕುಟುಂಬದ ಒಬ್ಬರಿಗೆ ಕಡ್ಡಾಯವಾಗಿ ಉದ್ಯೋಗ ನೀಡುವಂತೆ ಜಿಲ್ಲೆಯ ಸಿಮೆಂಟ್ ಕಾರ್ಖಾನೆಗಳಿಗೆ ಸೂಚಿಸಲಾಗಿದೆ’ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಿಮೆಂಟ್ ಕಾರ್ಖಾನೆ ಮತ್ತು ವಿಮಾನ ನಿಲ್ದಾಣ ಕಾಮಗಾರಿಯ ಪ್ರಗತಿ ಕುರಿತು ಶನಿವಾರ ಏರ್ಪಡಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಭಾಗವಹಿಸಿದ್ದ ಅವರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

‘ರೈತರು ಸಿಮೆಂಟ್ ಕಾರ್ಖಾನೆ ಮಾಲೀಕರಿಗೆ ನೇರವಾಗಿ ಭೂಮಿಯನ್ನು ಮಾರಾಟ ಮಾಡಬಹುದು. ಕರ್ನಾಟಕ ಭೂ ಸುಧಾರಣೆಗಳ ಕಾಯ್ದೆ  ಅಡಿಯಲ್ಲಿ ಭೂಮಿ ಖರೀದಿಗೆ ಮಂಜೂ­ರಾತಿ ನೀಡಲು ಜಿಲ್ಲಾಧಿಕಾ­ರಿಗೆ ಅನುಮತಿ ನೀಡಲಾಗಿದೆ. ತ್ವರಿತಗತಿಯಲ್ಲಿ ಕಾರ್ಖಾನೆಗಳ ಆರಂಭಕ್ಕೆ ಜಿಲ್ಲಾಧಿಕಾರಿ ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.

ADVERTISEMENT

‘ಸಿಮೆಂಟ್ ಕಾರ್ಖಾನೆಗಳು ವಾರ್ಷಿಕ ಲಾಭಾಂಶದಲ್ಲಿ ಶೇ 2ರಷ್ಟು ಹಣವನ್ನು ಕಾರ್ಪೊರೇಟ್ ಕಂಪೆನಿಗಳ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್)ಗೆ ಮೀಸಲಿರಿಸಬೇಕು. ಸಾಧ್ಯವಾದರೆ ಶೇ 2ಕ್ಕಿಂತ ಹೆಚ್ಚು ಹಣವನ್ನು ಬಳಸಬೇಕು. ಸ್ಥಳೀಯ ಯುವಕರಿಗೆ ಕೌಶಲ ಅಭಿವೃದ್ಧಿ ತರಬೇತಿ ನಿಡಬೇಕು ಮತ್ತು ಉದ್ಯೋಗ ಸೃಷ್ಟಿಸಬೇಕು’ ಎಂದು ಸಲಹೆ ನೀಡಿದರು.

ಇದಾದ ಬಳಿಕ ಸಚಿವರು ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲಿಸಿದರು. ನಂದೂರ–ಕೆಸರಟಗಿ ಕೈಗಾರಿಕಾ ಪ್ರದೇಶದಲ್ಲಿ ಮಹಿಳಾ ಉದ್ಯಮಿಗಳ ಪಾರ್ಕ್ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು.

ಸಚಿವರಾದ ಡಾ. ಶರಣಪ್ರಕಾಶ ಪಾಟೀಲ, ಪ್ರಿಯಾಂಕ್ ಖರ್ಗೆ, ಶಾಸಕರಾದ ಡಾ. ಉಮೇಶ ಜಾಧವ್, ಡಾ. ಅಜಯಸಿಂಗ್, ಬಿ.ಆರ್.ಪಾಟೀಲ, ಪ್ರಾದೇಶಿಕ ಆಯುಕ್ತ ಹರ್ಷ ಗುಪ್ತ, ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.