ಜೇವರ್ಗಿ: ರಾಜ್ಯದಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಹಿಂದೂ ಕಾರ್ಯಕರ್ತರ ಹತ್ಯೆ ಪ್ರಕರಣಗಳ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕು. ತಪ್ಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಬೇಕು. ಹಿಂದೂ ಸಂಘಟನೆಗಳ ಕಾರ್ಯಕರ್ತರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿ ಹಿಂದೂ ಹಿತರಕ್ಷಣಾ ವೇದಿಕೆ ತಾಲ್ಲೂಕು ಘಟಕದಿಂದ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ವೇದಿಕೆಯ ತಾಲ್ಲೂಕು ಘಟಕದ ಗೌರವ ಸಂಚಾಲಕ ಮಲ್ಲಿಕಾರ್ಜುನ ಆದವಾನಿ ಮಾತನಾಡಿ, ‘ರಾಜ್ಯದಲ್ಲಿ ನಡೆಯುತ್ತಿರುವ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆ ತಡೆಯಬೇಕು. ಪ್ರಕರಣಗಳ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಎಸ್ಡಿಪಿಐ ಸೇರಿದಂತೆ ರಾಜ್ಯದಲ್ಲಿನ ಮತೀಯ ಸಂಘಟನೆಗಳನ್ನು ನಿಷೇಧಿಸಬೇಕು’ ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.
ಪ್ರತಿಭಟನೆಗೂ ಮುನ್ನ ಹಿಂದೂ ಸಂಘಟನೆಗಳ ಕಾರ್ಯಕರ್ತರು ಪಟ್ಟಣದ ಬಸವೇಶ್ವರ ವೃತ್ತದಿಂದ ಮಿನಿ ವಿಧಾನಸೌಧವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ನಂತರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ಯಲ್ಲಪ್ಪ ಸುಬೇದಾರ್ ಅವರ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಮಲ್ಲಿನಾಥಗೌಡ ಯಲಗೋಡ, ಬಸವರಾಜ ಮಾಲಿಪಾಟೀಲ, ಹಳ್ಳೆಪ್ಪಾಚಾರ್ಯ ಜೋಶಿ, ಬಸವರಾಜ ಪಾಟೀಲ ನರಿಬೋಳ, ಮರೆಪ್ಪ ಬಡಿಗೇರ್, ಸಾಯಬಣ್ಣ ದೊಡಮನಿ, ಜಿ.ಪಂ ಸದಸ್ಯ ರೇವಣಸಿದ್ದಪ್ಪ ಸಂಕಾಲಿ, ಪ್ರವೀಣಕುಮಾರ್ ಕುಂಟೋಜಿಮಠ, ಸೋಮಶೇಖರ ಹೂಗಾರ, ಅಶೋಕ ಬಿರಾದಾರ್, ವೀರೇಶ ಪಾಟೀಲ ನರಿಬೋಳ, ಮಲ್ಲಶೆಟ್ಟೆಪ್ಪಗೌಡ ಹಿರೇಗೌಡ, ಬಸವರಾಜ ಸುಗೂರ, ಸಂಗಣ್ಣಗೌಡ ರದ್ದೇವಾಡಗಿ, ಬಸವರಾಜ ಕಿರಣಗಿ, ಶರಣು ಕೋಳಕೂರ, ಭೀಮರಾಯ ಮಡಿವಾಳಕರ್, ರಾಜು ದೊಡಮನಿ, ಭೀಮರಾಯ ಹಳ್ಳಿ, ಶರಣು ವಡಗೇರಿ, ಸಂತೋಷ ಮಲ್ಲಾಬಾದಿ ಸೇರಿದಂತೆ ವೇದಿಕೆ ತಾಲ್ಲೂಕು ಘಟಕದ ಪದಾಧಿಕಾರಿಗಳು ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.