ADVERTISEMENT

‘ಬಿಜೆಪಿಗೆ ಕಣ್ಣು, ಕಿವಿ ಇಲ್ಲ’

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2014, 9:58 IST
Last Updated 21 ಮಾರ್ಚ್ 2014, 9:58 IST

ಗುಲ್ಬರ್ಗ: ‘ಯುಪಿಎ ಸರ್ಕಾರ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದರೂ ಅಭಿವೃದ್ಧಿ ಎಲ್ಲಿ ಆಗಿದೆ ಎಂದು ಪ್ರಶ್ನಿಸುತ್ತಿರುವ ಬಿಜೆಪಿಗೆ ಕಣ್ಣು, ಕಿವಿ ಇಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ನಗರದ ಪಕ್ಷದ ಕಚೇರಿಯಲ್ಲಿ ಗುರುವಾರ ಏರ್ಪಡಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

‘ಮಲ್ಲಿಕಾರ್ಜುನ ಖರ್ಗೆ ಅವರು ಕಾರ್ಮಿಕ ಹಾಗೂ ರೈಲ್ವೆ ಸಚಿವರಾಗಿ 5 ವರ್ಷಗಳಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಕ್ಷೇತ್ರದಲ್ಲಿ ಒಂದು ಸುತ್ತು ಹಾಕಿದರೆ ಎಲ್ಲ ಕೆಲಸಗಳೂ ಕಣ್ಣಿಗೆ ಕಾಣಿಸುತ್ತವೆ’ ಎಂದರು.

ರೈಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ‘ಬಿಜೆಪಿಗೆ ಕಾಮಾಲೆ ರೋಗ ಅಂಟಿಕೊಂಡಿದೆ. ಎಲ್ಲವೂ ಹಳದಿಯಾಗಿ ಕಾಣುತ್ತಿದೆ. 371 (ಜೆ) ತಿದ್ದುಪಡಿ, ಇಎಸ್‌ಐ ಆಸ್ಪತ್ರೆ, ಪ್ರತ್ಯೇಕ ರೈಲ್ವೆ ವಿಭಾಗೀಯ ಕಚೇರಿ, ಹಲವಾರು ನೂತನ ರೈಲು ಸೇವೆ, ಕೇಂದ್ರೀಯ ವಿಶ್ವವಿದ್ಯಾಲಯ ಸೇರಿದಂತೆ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದರೂ ಅಭಿವೃದ್ಧಿಯೇ ಆಗಿಲ್ಲ ಎನ್ನುವ ಬಿಜೆಪಿ ಕಾಮಾಲೆ ರೋಗದಿಂದ ಹೊರಬರಬೇಕು’ ಎಂದು ಸಲಹೆ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಖಮರುಲ್ ಇಸ್ಲಾಂ, ಜವಳಿ ಸಚಿವ ಬಾಬುರಾವ್ ಚಿಂಚನ ಸೂರ್, ವೀರಣ್ಣ ಮತ್ತಿಕಟ್ಟಿ, ಕೆ.ಸಿ.ಕೊಂಡಯ್ಯ, ಅಲ್ಲಮಪ್ರಭು ಪಾಟೀಲ್, ಮಾಲೀಕಯ್ಯ ಗುತ್ತೇದಾರ, ಯು.ಬಿ.ವೆಂಕಟೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.