ADVERTISEMENT

ಸೇಡಂ: 10 ಸಾವಿರ ಲಸಿಕೆ ನೀಡುವ ಗುರಿ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2021, 15:44 IST
Last Updated 15 ಸೆಪ್ಟೆಂಬರ್ 2021, 15:44 IST
ಸೇಡಂನ ಬಿಆರ್‌ಸಿ ಕೇಂದ್ರದಲ್ಲಿ ನಡೆದ ಲಸಿಕಾ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ ತಹಶೀಲ್ದಾರ್ ಬಸವರಾಜ ಬೆಣ್ಣೆಶಿರೂರ್ ಮಾತನಾಡಿದರು
ಸೇಡಂನ ಬಿಆರ್‌ಸಿ ಕೇಂದ್ರದಲ್ಲಿ ನಡೆದ ಲಸಿಕಾ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ ತಹಶೀಲ್ದಾರ್ ಬಸವರಾಜ ಬೆಣ್ಣೆಶಿರೂರ್ ಮಾತನಾಡಿದರು   

ಸೇಡಂ: ಕಲ್ಯಾಣ ಕರ್ನಾಟಕ ಉತ್ಸವ ದಿನ (ಸೆ.17)ದಂದೇ ತಾಲ್ಲೂಕು ಆಡಳಿತ ಹಾಗೂ ಆರೋಗ್ಯ ಇಲಾಖೆಯೂ ತಾಲ್ಲೂಕಿನಾದ್ಯಂತ 10 ಸಾವಿರ ಲಸಿಕೆ ನೀಡುವ ವಿಶೇಷ ಲಸಿಕಾ ಅಭಿಯಾನ ಹಮ್ಮಿಕೊಂಡಿವೆ.

ತಹಶೀಲ್ದಾರ್ ಬಸವಾರಜ ಬೆಣ್ಣೆಶಿರೂರ್ ಅವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು, ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಖಾಸಗಿ ವೈದ್ಯರ ಜೊತೆಗೆ ಸಭೆ ನಡೆದಿದ್ದು, ವಿವಿಧ ಇಲಾಖೆಯ ಅಧಿಕಾರಿಗಳಿಗೆ ಜವಾಬ್ದಾರಿಗಳನ್ನು ನೀಡಲಾಗಿದೆ.

ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆಗೆ ವಿಶೇಷ ಸಭೆ ನಡೆಸಲಾಗಿದ್ದು, ಬಿಆರ್‌ಸಿ, ಸಿಆರ್‌ಪಿ ಸೇರಿದಂತೆ ಶಿಕ್ಷಕರು ಹೆಚ್ಚಿನ ಮುತುವರ್ಜಿ ವಹಿಸಿ ಶ್ರಮಿಸುವಂತೆ ಹೇಳಿದ್ದಾರೆ. ಶಾಲೆಯಲ್ಲಿ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಯಾವ ಪಾಲಕರು ಲಸಿಕೆ ಪಡೆದಿಲ್ಲವೋ ಅಂತವರನ್ನು ಗುರುತಿಸಿ ಅವರಿಗೆ ಲಸಿಕೆ ಪಡೆಯುವಂತೆ ಮನವೊಲಿಸುವಂತೆ ಸಭೆಯಲ್ಲಿ ಸೂಚಿಸಲಾಗಿದೆ.

ADVERTISEMENT

ತಾಲ್ಲೂಕಿನಾದ್ಯಂತ ಒಟ್ಟು 100ಕ್ಕೂ ಅಧಿಕ ಲಸಿಕಾ ಕೇಂದ್ರಗಳನ್ನು ತೆರೆಯಲು ತಾಲ್ಲೂಕು ಆಡಳಿತ ಮತ್ತು ಆರೋಗ್ಯ ಇಲಾಖೆ ನಿರ್ಧರಿಸಿದೆ. ಜೊತೆಗೆ 2 ಸಂಚಾರಿ ವಾಹನವನ್ನು ಬಳಕೆ ಮಾಡಿಕೊಳ್ಳುತ್ತಿದೆ.

ಪ್ರತಿ ಲಸಿಕಾ ಕೇಂದ್ರದಲ್ಲಿ, ಆರೋಗ್ಯ ಇಲಾಖೆಯ ಒಬ್ಬರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಕಂದಾಯ ಇಲಾಖೆ, ಕೃಷಿ ಇಲಾಖೆ, ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಕೆಲಸ ನಿರ್ವಹಿಸಲಿದ್ದಾರೆ. ತಾಲ್ಲೂಕು ಮಟ್ಟದ ಅಧಿಕಾರಿಗಳಲ್ಲಿ 9 ಜನಕ್ಕೆ ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದ್ದು, ಪ್ರತಿತಕ್ಷಣಕ್ಕೆ ಲಸಿಕಾ ಅಭಿಯಾನದ ಕುರಿತು ಮುತುವರ್ಜಿ ವಹಿಸಲಿದ್ದಾರೆ ಎಂದು ತಹಶಿಲ್ದಾರ್ ಬಸವರಾಜ ಬೆಣ್ಣೆಶಿರೂರ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ತಾಲ್ಲೂಕಿನಾದ್ಯಂತ ಈಗಾಗಲೇ 1,65,000 ಸಾವಿರ ಜನರ ಪೈಕಿ ಈಗಾಗಲೇ ಸುಮಾರು 1,16,000 ಸಾವಿರಕ್ಕೂ ಅಧಿಕ ಜನರಿಗೆ ಲಸಿಕೆ ನೀಡಲಾಗಿದೆ.

*ಕ.ಕ ಉತ್ಸವ ದಿನದಂದು ತಾಲ್ಲೂಕಿನಾದ್ಯಂತ ಲಸಿಕಾ ಅಭಿಯಾನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಎಲ್ಲರ ಸಹಯೋಗದಲ್ಲಿ ಲಸಿಕಾ ಅಭಿಯಾನ ಯಶಸ್ವಿಯಾಗಲಿದೆ.
- ಡಾ.ಸುರೇಶ ಮೇಕಿನ್, ತಾಲೂಕು ಆರೋಗ್ಯಾಧಿಕಾರಿ

*ಪ್ರತಿಬಾರಿ ನಮಗೆ 5 ಸಾವಿರ ಗುರಿ ನೀಡದಾಗ ನಾವು 6 ಸಾವಿರ ಗಡಿ ದಾಟಿದ್ದೇವೆ. 10 ಸಾವಿರ ಗುರಿ ನೀಡುವ ನಿಯೋಜಿತ ಯೋಜನೆ ಹಾಕಿಕೊಳ್ಳಲಾಗಿದ್ದು, ಗುರಿ ದಾಟಲಿದೆ.
- ಬಸವರಾಜ ಬೆಣ್ಣೆಶಿರೂರ್, ತಹಶೀಲ್ದಾರ್ ಸೇಡಂ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.