ಕಲಬುರ್ಗಿ: ಜಿಲ್ಲೆಯ ಅಫಜಲಪುರ ತಾಲ್ಲೂಕು ದೇವಲಗಾಣಗಾಪುರ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ದಸ್ತಗೀರಸಾಬ್ ನದಾಫ್ ಅವರ ಮೇಲೆ ಹಲ್ಲೆ ಮಾಡಿರುವ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು ಹಾಗೂ ಸದಸ್ಯರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾ ಸಮಿತಿ ಸದಸ್ಯರು ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಬುಧವಾರ ಪ್ರತಿಭಟನೆ ಮಾಡಿದರು.
‘ದಸ್ತಗೀರಸಾಬ್ ಅವರ ಮೇಲೆ ಉಪಾಧ್ಯಕ್ಷೆ ಸಾವಿತ್ರಿಬಾಯಿ ಹೊಸಮನಿ, ಸದಸ್ಯರಾದ ಕಲ್ಲವ್ವ ಕಾಂಬಳೆ, ಮೀನಾಕ್ಷಿ ಶಿವಪಾದಪ್ಪ ಮತ್ತು ಅವರ ಪತಿ ಹಾಗೂ ಸಂತೋಷ ವಡಗೇರಿ ಸೇರಿ ಹಲ್ಲೆ ಮಾಡಿದ್ದಾರೆ. ಅಲ್ಲದೆ ಜೀವ ಬೆದರಿಕೆ ಹಾಕಿದ್ದಾರೆ’ ಎಂದು ಆರೋಪಿಸಿದರು.
‘ತಪ್ಪಿತಸ್ಥರ ಮೇಲೆ ಕಾನೂನಿನ ಕ್ರಮ ಕೈಗೊಂಡು ಅವರ ಸದಸ್ಯತ್ವವನ್ನು ರದ್ದುಗೊಳಿಸಬೇಕು. ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಸರ್ಕಾರ ರಕ್ಷಣೆ ನೀಡಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡಲಾಗುವುದು’ ಎಂದು ಎಚ್ಚರಿಕೆ ನೀಡಿದರು.
ಜಿಲ್ಲಾ ಸಮಿತಿ ಅಧ್ಯಕ್ಷ ಬಾಬುರಾವ ಧುತ್ತರಗಾಂವ, ಪ್ರಧಾನ ಕಾರ್ಯದರ್ಶಿ ಉಮಾಶಂಕರ ಕಡಣಿ, ಖಜಾಂಚಿ ಶಿವಾನಂದ ಕವಲಗಾ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.