ಆಳಂದ: ಆಳಂದ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಮುಖಂಡ ಸೂರ್ಯಕಾಂತ ಕೋರಳ್ಳಿ ಹೆಸರು ಪಕ್ಷದ ಮೊದಲ ಪಟ್ಟಿಯಲ್ಲಿ ಘೋಷಣೆಯಾಗಿದೆ. ಇದರಿಂದ ಕ್ಷೇತ್ರದಲ್ಲಿ ಎದ್ದಿರುವ ಅನೇಕ ಊಹಾಪೋಹಗಳಿಗೆ ತೆರೆಬಿದ್ದಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕ್ಷೇತ್ರದಲ್ಲಿ ಓಡಾಟ ಮಾಡಿದ್ದರೂ ಕೋರಳ್ಳಿ ಅವರಿಗೆ ಟಿಕೆಟ್ ತಪ್ಪಿತು. ಮಾಜಿ ಶಾಸಕ ಸುಭಾಷ ಗುತ್ತೇದಾರ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾದ ಮೇಲೆ ಸೂರ್ಯಕಾಂತ ಅವರು ಜೆಡಿಎಸ್ ಸೇರ್ಪಡೆಯಾಗಿದ್ದರು. ಎರಡು ವರ್ಷದಿಂದ ಜೆಡಿಎಸ್ ಸಂಘಟನೆಯಲ್ಲಿ ತೊಡಗಿದ್ದಾರೆ.
ಜೆಡಿಎಸ್ನ ಒಂದು ಗುಂಪು ಹಳ್ಳಿ ಸಲಗರದ ಅರುಣಕುಮಾರ ಸಿ.ಪಾಟೀಲ ಅವರಿಗೆ ಟಿಕೆಟ್ ಕೊಡಿಸುವ ಪ್ರಯತ್ನ ನಡೆಸಿತ್ತು. ಆದರೆ, ಪಕ್ಷದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಳಂದ ಪಟ್ಟಣಕ್ಕೆ ಬಂದಾಗ ಕಷ್ಟದ ಸಮಯದಲ್ಲಿ ಪಕ್ಷವನ್ನು ಸಂಘಟಿಸಲು ಶ್ರಮಿಸಿದ ಸೂರ್ಯಕಾಂತ ಕೊರಳ್ಳಿಗೆ ಗೆಲ್ಲಿಸಬೇಕು ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ಮೊದಲ ಪಟ್ಟಿಯಲ್ಲಿ ಸೂರ್ಯಕಾಂತ ಹೆಸರು ಇರುವುದು ಬೆಂಬಲಿಗರಿಗೆ ಸಂತಸ ತಂದಿದೆ. ಕ್ಷೇತ್ರದಲ್ಲಿ ಆರೋಗ್ಯ ಶಿಬಿರ, ಉದ್ಯೋಗ ಮೇಳಗಳ ಮೂಲಕ ಅವರು ಪ್ರಚಾರ ಆರಂಭಿಸಿದ್ದಾರೆ. ಕ್ಷೇತ್ರದಲ್ಲಿ ಜೆಡಿಎಸ್ಗೆ ಭದ್ರ ನೆಲೆಯಿದೆ. ಹಾಲಿ ಮತ್ತು ಮಾಜಿ ಶಾಸಕರು ಹಿಂದೆ ಎರಡು ಬಾರಿ ಜೆಡಿಎಸ್ನಿಂದ ಗೆದಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.