ಕಲಬುರ್ಗಿ: ಇಲ್ಲಿನ ಕೇಂದ್ರ ಬಸ್ ನಿಲ್ದಾಣದ ಎದುರಿನ ಕಾಮತ್ ಹೋಟೆಲ್ ಮೇಲ್ಭಾಗದಲ್ಲಿ ಖಾಲಿ ಸಿಲಿಂಡರ್ನಿಂದ ಷರೀಫ್ ಮೊಹಮ್ಮದ್ ವಾಹೀದ್ ಖಾನ್ ಅವರ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ಆರೋಪ ಸಾಬೀತಾಗಿದ್ದರಿಂದ ನೀಲೇಶ ಖಿರತ್ ಎಂಬಾತನಿಗೆ ಇಲ್ಲಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಏಳು ವರ್ಷ ಸಾದಾ ಜೈಲು ಶಿಕ್ಷೆ ಹಾಗೂ ₹ 10 ಸಾವಿರ ದಂಡ ವಿಧಿಸಿದೆ.
ನೀಲೇಶ ಹಲವು ಬಾರಿ ಮದ್ಯಪಾನ ಮಾಡಿ ಷರೀಫ್ ಅವರೊಂದಿಗೆ ತಂಟೆ ತಕರಾರು ಮಾಡುತ್ತಿದ್ದ. 2017ರ ಆಗಸ್ಟ್ 17ರಂದು ಬೆಳಗಿನ ಜಾವ ಹೋಟೆಲ್ನ ಮೊದಲ ಮಹಡಿಯಲ್ಲಿ ಮಲಗಿಕೊಂಡಿದ್ದ ಷರೀಫ್ ಅವರ ತಲೆಗೆ ಸಿಲಿಂಡರ್ನಿಂದ ಹೊಡೆದು ಗಾಯಗೊಳಿಸಿದ್ದ. ನಂತರ ಹಲವು ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರೂ ಪ್ರಯೋಜನವಾಗಲಿಲ್ಲ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ಅಶೋಕ ನಗರ ಠಾಣೆಯ ಅಂದಿನ ಪೊಲೀಸ್ ಇನ್ಸ್ಪೆಕ್ಟರ್ ರಮೇಶ ಕಾಂಬಳೆ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಧೀಶ ಜಗದೀಶ ವಿ.ಎನ್. ಅವರು ಶಿಕ್ಷೆಯ ಪ್ರಮಾಣ ಪ್ರಕಟಿಸಿದರು. ಸರ್ಕಾರದ ಪರವಾಗಿ 3ನೇ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಗುರುಲಿಂಗಪ್ಪ ತೇಲಿ ವಾದ ಮಂಡಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.