ಕಲಬುರಗಿ: ‘ನಕಲಿ ದಾಖಲೆಗಳನ್ನು ಬಳಸಿಕೊಂಡು ಆಸ್ತಿಗಳ ನೋಂದಣಿ ಮಾಡಿಸಿ ಪರರ ಆಸ್ತಿಗಳನ್ನು ಕಬಳಿಸುವವರನ್ನು ನಿಯಂತ್ರಿಸಲು ಆಸ್ತಿಗಳ ನೋಂದಣಿಗೆ ಆಧಾರ್ ದೃಢೀಕರಣ ಕಡ್ಡಾಯ ಮಾಡುವ ಚಿಂತನೆ ಇದೆ’ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
ಇಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆಸ್ತಿ ಕಬಳಿಕೆ ನಿಯಂತ್ರಣಕ್ಕೆ ಸುಪ್ರೀಂಕೋರ್ಟ್ ಸಲಹೆ ನೀಡಿದೆ. ಈ ಹಿನ್ನೆಲೆಯಲ್ಲಿ ಆಸ್ತಿ ನೋಂದಣಿಗೆ ಆಧಾರ್ ದೃಢೀಕರಣ ಕಡ್ಡಾಯ ಮಾಡುವುದರಿಂದ ಆಸ್ತಿ ವಂಚನೆಯ ಪ್ರಕರಣಗಳನ್ನು ನಿಯಂತ್ರಣಕ್ಕೆ ತರಬಹುದು. ಈ ಬಗ್ಗೆ ಗಂಭೀರ ಚಿಂತನೆ ನಡೆಯುತ್ತಿದ್ದು, ಅನುಷ್ಠಾನಕ್ಕಾಗಿ ಒಂದು ತಿಂಗಳಿಂದ ಕಾನೂನು ತಜ್ಞರ ಸಲಹೆ ಪಡೆಯಲಾಗುತ್ತಿದೆ’ ಎಂದರು.
‘748 ಪರವಾನಗಿ ಭೂಮಾಪಕರನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಈ ತಿಂಗಳಲ್ಲಿ ಎಲ್ಲ ಜಿಲ್ಲೆಗಳಿಗೆ ಹಂಚಿಕೆ ಮಾಡಲಾಗುವುದು. 347 ಸರ್ಕಾರಿ ಭೂಮಾಪಕರ ನೇಮಕಾತಿಗೆ ಅನುಮತಿ ಸಿಕ್ಕಿದ್ದು, ಶೀಘ್ರವೇ ಪ್ರಕ್ರಿಯೆ ಆರಂಭವಾಗಲಿದೆ. ಹೆಚ್ಚುವರಿಯಾಗಿ 592 ಭೂಮಾಪಕರ ನೇಮಕಾತಿಗೂ ಮುಖ್ಯಮಂತ್ರಿ ಮೌಖಿಕ ಅನುಮತಿ ಕೊಟ್ಟಿದ್ದಾರೆ’ ಎಂದು ಮಾಹಿತಿ ನೀಡಿದರು.
‘ಬಾಕಿ ಉಳಿದ ನೋಂದಣಿ ಪ್ರಕ್ರಿಯೆಯನ್ನು ವೇಗಗೊಳಿಸಲು ಎಲ್ಲ ತಾಲ್ಲೂಕುಗಳ ನೋಂದಣಿ ಕಚೇರಿಗಳಿಗೆ ₹ 10 ಕೋಟಿ ವೆಚ್ಚದ ಅತ್ಯಾಧುನಿಕ ಉಪಕರಣಗಳನ್ನು ಪೂರೈಕೆ ಮಾಡಲಾಗುವುದು. ಸಲಕರಣೆಗಳ ಪೂರೈಕೆಗೆ ಟೆಂಡರ್ ಕರೆಯಲು ಸೂಚಿಸಲಾಗಿದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.