
ಕಲಬುರಗಿ: ‘ಕಬ್ಬು ಮಾರಾಟ ಮಾಡಲು ಬರುವ ರೈತರಿಗೆ ಕುಡಿಯುವ ನೀರು, ಶೌಚಾಲಯ ಹಾಗೂ ರಾತ್ರಿ ಉಳಿದುಕೊಳ್ಳಲು ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು’ ಎಂದು ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಸೂಚಿಸಿದರು.
ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಚಿಣಮಗೇರಾದ ಕೆ.ಪಿ.ಆರ್ ಶುಗರ್ಸ್ ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಅವರು, ‘ಸಕಾಲದಲ್ಲಿ ರೈತರಿಗೆ ಕಬ್ಬಿನ ಹಣ ಪಾವತಿ ಮಾಡಬೇಕು. ಅನಗತ್ಯ ವಿಳಂಬ ಮಾಡಬಾರದು. ಹಣ ಪಾವತಿಯ ಪ್ರತಿ ವ್ಯವಹಾರ ಪಾರದರ್ಶಕವಾಗಿರಬೇಕು. ರೈತರಿಗೆ ಪ್ರತಿ ಹಂತದ ಮಾಹಿತಿ ಒದಗಿಸಬೇಕು. ರೈತರ ಸಮಕ್ಷಮದಲ್ಲಿಯೇ ಕಬ್ಬು ತೂಕ ಮಾಡಬೇಕು’ ಕಾರ್ಖಾನೆಯವರಿಗೆ ತಾಕೀತು ಮಾಡಿದರು.
ಕಬ್ಬಿನ ತೂಕದ ಪ್ರಕ್ರಿಯೆ ಪರಿಶೀಲಿಸಿದರು. ಕಾರ್ಖಾನೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿದ ಅವರು ಕಬ್ಬು ಇಳುವರಿ ಕುರಿತು ಕಾರ್ಖಾನೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ರೈತರ ಸಮಸ್ಯೆ ಆಲಿಸಿದರು.
ತಹಶೀಲ್ದಾರ್ ಸಂಜೀವಕುಮಾರ ದಾಸರ್ ಸೇರಿದಂತೆ ಕಾರ್ಖಾನೆ ಉಪಾಧ್ಯಕ್ಷ, ಅಧಿಕಾರಿಗಳು, ರೈತ ಮುಖಂಡರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.