ಕಲಬುರಗಿ: ಅಖಿಲ ಭಾರತ ಪ್ರಜಾಸತ್ತಾತ್ಮಕ ಯುವಜನ ಸಂಘಟನೆ (ಎಐಡಿವೈಓ)ಯ 5ನೆ ರಾಜ್ಯಮಟ್ಟದ ಸಮ್ಮೇಳನ ಇದೇ 27, 28ರಂದು ನಗರದ ಹೊಸ ಜೇವರ್ಗಿ ರಸ್ತೆಯ ಶಮ್ಸ್ ಫಂಕ್ಷನ್ ಹಾಲ್ನಲ್ಲಿ ನಡೆಯಲಿದೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಜಗನ್ನಾಥ ಎಚ್.ಎಸ್., ‘ದೇಶದಾದ್ಯಂತ ಹೆಚ್ಚುತ್ತಿರುವ ನಿರುದ್ಯೋಗ, ಬೆಲೆ ಏರಿಕೆ ಹಾಗೂ ಸಾಂಸ್ಕೃತಿಕ ಅವನತಿಗಳ ವಿರುದ್ಧ ಹೋರಾಟವನ್ನು ವ್ಯಾಪಕವಾಗಿ ಬೆಳೆಸುವ ಉದ್ದೇಶದಿಂದ ಇದೇ ತಿಂಗಳು ಸಮ್ಮೇಳನ ನಡೆಯಲಿದೆ. ಬಹಿರಂಗ ಅಧಿವೇಶವನ್ನು ಪ್ರಗತಿಪರ ಚಿಂತಕ, ಶಿಕ್ಷಣ ತಜ್ಞ ಡಾ.ಬರಗೂರು ರಾಮಚಂದ್ರಪ್ಪ ಉದ್ಘಾಟಿಸುವರು. ಮುಖ್ಯ ಅತಿಥಿಯಾಗಿ ಎಸ್ಯುಸಿಐ ಕಮ್ಯುನಿಸ್ಟ್ ಪಕ್ಷದ ರಾಜ್ಯ ಕಾರ್ಯದರ್ಶಿ ಕೆ. ಉಮಾ ಭಾಗವಹಿಸುವರು. ಅತಿಥಿಗಳಾಗಿ ಎಐಡಿವೈಓ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರತಿಭಾ ನಾಯಕ್ ಮತ್ತು ಗುಲಬರ್ಗಾ ವಿಶ್ವವಿದ್ಯಾಲಯದ ಜೈವಿಕ ತಂತ್ರಜ್ಞಾನ ವಿಭಾಗದ ಪ್ರಾಧ್ಯಾಪಕ ಡಾ.ರಮೇಶ ಲಂಡನಕರ್ ಮಾತನಾಡುವರು. ಎಐಡಿವೈಓ ಅಖಿಲ ಭಾರತ ಅಧ್ಯಕ್ಷ ರಾಮಾಂಜನಪ್ಪ ಆಲ್ದಳ್ಳಿ ಮುಖ್ಯ ಭಾಷಣ ಮಾಡುವರು. ಸಂಘಟನೆಯ ರಾಜ್ಯ ಕಾರ್ಯದರ್ಶಿ ಡಾ.ಜಿ. ಶಶಿಕುಮಾರ ಪ್ರಾಸ್ತಾವಿಕವಾಗಿ ಮಾತಾನಾಡಲಿದ್ದಾರೆ. ಅಧ್ಯಕ್ಷತೆಯನ್ನು ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷೆ ಎಂ.ಉಮಾದೇವಿ ವಹಿಸಲಿದ್ದಾರೆ’ ಎಂದಿದ್ದಾರೆ.
ನ 28ರಂದು ಪ್ರತಿನಿಧಿಗಳ ಅಧಿವೇಶನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆ ಮತ್ತು ಯುವಜನರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಲಾಗುವುದು. ಪ್ರಸಕ್ತ ರಾಜಕೀಯ, ಸಾಮಾಜಿಕ ಪರಿಸ್ಥಿತಿ ಮತ್ತು ಸಂಘಟನಾತ್ಮಕ ವರದಿ ಮಂಡಿಸಲಾಗುವುದು. ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು. ಗುತ್ತಿಗೆ–ಹೊರ ಗುತ್ತಿಗೆ ಪದ್ಧತಿ ಕೈ ಬಿಟ್ಟು ಕಾಯಂ ಭರ್ತಿ ಮಾಡಲು ಮುಂದಾಗಬೇಕು. ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಕಾರಣವಾಗುತ್ತಿರುವ ಅಶ್ಲೀಲತೆ, ಕುಸಂಸ್ಕ್ರತಿಯನ್ನು ಹರಡುವ ಸಿನಿಮಾ ಸಾಹಿತ್ಯ ಹಾಗೂ ಮದ್ಯಪಾನ ಸಂಪೂರ್ಣವಾಗಿ ನಿಷೇಧಿಸಬೇಕು. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಎಲ್ಲಾ ಅಗತ್ಯ ವಸ್ತಗಳ ಮೇಲಿನ ತೆರಿಗೆಯನ್ನು ಕಡಿತಗೊಳಿಸಿ ಬೆಲೆ ಏರಿಕೆ ನಿಯಂತ್ರಿಸಬೇಕು. ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಸಮರ್ಪವಾಗಿ ಅನುಷ್ಠಾನ ಗೊಳಿಸಬೇಕು. ಒಂದು ಕುಟುಂಬಕ್ಕೆ ವಾರ್ಷಿಕ ಕನಿಷ್ಠ 200 ಮಾನವ ದಿನಗಳು ಉದ್ಯೋಗ ಖಾತ್ರಿಗೊಳಿಸಬೇಕು ಮುಂತಾದ ಬೇಡಿಕೆಗಳನ್ನು ಅಂಗೀಕರಿಸಿ ಸರ್ಕಾರಕ್ಕೆ ಒತ್ತಾಯಿಸಲಾಗುವುದು’ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.