ADVERTISEMENT

ಕಲಬುರ್ಗಿ| ಖಾಸಗಿ ಆಸ್ಪತ್ರೆಗಳ ರಾಷ್ಟ್ರೀಕರಣಕ್ಕೆ ಎಐವೈಎಫ್‌ ಒತ್ತಾಯ

​ಪ್ರಜಾವಾಣಿ ವಾರ್ತೆ
Published 18 ಜೂನ್ 2020, 2:16 IST
Last Updated 18 ಜೂನ್ 2020, 2:16 IST
ಅಖಿಲ ಭಾರತ ಯುವಜನ ಫೆಡರೇಶನ್‌ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು
ಅಖಿಲ ಭಾರತ ಯುವಜನ ಫೆಡರೇಶನ್‌ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು   

ಕಲಬುರ್ಗಿ: ಕೋವಿಡ್‌–19 ಸಾಂಕ್ರಾಮಿಕ ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ದೇಶದ ಎಲ್ಲ ಖಾಸಗಿ ಆಸ್ಪತ್ರೆಗಳನ್ನು ರಾಷ್ಟ್ರೀಕರಣಗೊಳಿಸಬೇಕು ಎಂದು ಒತ್ತಾಯಿಸಿ ಅಖಿಲ ಭಾರತ ಯುವಜನ ಫೆಡರೇಶನ್‌ ಕಾರ್ಯಕರ್ತರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಸಂಘಟನೆಯ ಕೇಂದ್ರ ಸಮಿತಿಯು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿರಾಷ್ಟ್ರವ್ಯಾಪಿ ಕರೆ ನೀಡಿದ್ದ ಚಳವಳಿಯ ಅಂಗವಾಗಿ ನಗರದಲ್ಲಿಯೂ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ವಿದ್ಯುತ್‌ ಬಿಲ್‌ ಮನ್ನಾ ಮಾಡಬೇಕು. ಜೊತೆಗೆ ಪ್ರತಿ ಬಡ ಕುಟುಂಬಗಳಿಗೆ ಮಾಸಿಕ ₹ 10 ಸಾವಿರದಂತೆ ಮೂರು ತಿಂಗಳು ಕೊರೊನಾ ಪರಿಹಾರ ನಿಧಿಯನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ADVERTISEMENT

ವೈದ್ಯಕೀಯ ಶಿಕ್ಷಣದಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ ಪ್ರಮಾಣವನ್ನು ಶೇ 27ರಷ್ಟನ್ನು ಕೂಡಲೇ ಜಾರಿಗೊಳಿಸಬೇಕು. ಸಾರ್ವಜನಿಕ ಉದ್ಯಮಗಳನ್ನು ಖಾಸಗೀಕರಣಗೊಳಿಸುವುದನ್ನು ನಿಲ್ಲಿಸಬೇಕು. ಯುವಜನರಿಗೆ ಉದ್ಯೋಗ ಭದ್ರತೆ ಒದಗಿಸಲು ಭಗತ್ ಸಿಂಗ್ ಹೆಸರಿನಲ್ಲಿ ಉದ್ಯೋಗ ಭದ್ರತೆ ಕಾಯ್ದೆಯನ್ನು ಜಾರಿಗೊಳಿಸಬೇಕು. ದೇಶದ ದಲಿತರು ಮತ್ತು ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ನಿಲ್ಲಿಸಬೇಕು. ನರೇಗಾ ಯೋಜನೆಯಡಿ ಕೆಲಸದ ದಿನಗಳನ್ನು ಹೆಚ್ಚಿಸಬೇಕು. ಪ್ರಧಾನಮಂತ್ರಿ ಕೇರ್‌ ನಿಧಿಯನ್ನು ಮಾಹಿತಿ ಹಕ್ಕು ಕಾಯ್ದೆಯಡಿ ತರಬೇಕು ಎಂದು ಆಗ್ರಹಿಸಿದರು.

ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಹಣಮಂತರಾಯ ಎಸ್‌. ಅಟ್ಟೂರ, ಜಿಲ್ಲಾ ಮುಖಂಡರಾದ ಮಲಕಾರಿ ಎಸ್‌. ಪೂಜಾರಿ, ಮೆಹಬೂಬಸಾಬ್ ಸರಡಗಿ, ರಘುನಂದನ ಕುಲಕರ್ಣಿ, ಮಹೇಶ ಎಸ್‌. ಕೊಗನೂರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.