ADVERTISEMENT

ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ

ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಡಾ.ಅಜಯಸಿಂಗ್ ತಾಕೀತು

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2019, 10:34 IST
Last Updated 12 ನವೆಂಬರ್ 2019, 10:34 IST
ಜೇವರ್ಗಿ ಪಟ್ಟಣದ ಮಿನಿ ವಿಧಾನಸೌಧದಲ್ಲಿರುವ ಶಾಸಕರ ಕಚೇರಿಯಲ್ಲಿ ಸೋಮವಾರ ಶಾಸಕ ಡಾ.ಅಜಯಸಿಂಗ್ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ತಹಶೀಲ್ದಾರ್ ಸಿದ್ದರಾಯ ಭೋಸಗಿ ಇದ್ದರು
ಜೇವರ್ಗಿ ಪಟ್ಟಣದ ಮಿನಿ ವಿಧಾನಸೌಧದಲ್ಲಿರುವ ಶಾಸಕರ ಕಚೇರಿಯಲ್ಲಿ ಸೋಮವಾರ ಶಾಸಕ ಡಾ.ಅಜಯಸಿಂಗ್ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ತಹಶೀಲ್ದಾರ್ ಸಿದ್ದರಾಯ ಭೋಸಗಿ ಇದ್ದರು   

ಜೇವರ್ಗಿ: ‘ರಾಜ್ಯ ಸರ್ಕಾರದ ವಿವಿಧ ಯೋಜನೆಗಳಲ್ಲಿ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು’ ಎಂದು ಶಾಸಕ ಡಾ.ಅಜಯಸಿಂಗ್ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ತಾಕೀತುಮಾಡಿದರು.

ಪಟ್ಟಣದ ಮಿನಿ ವಿಧಾನಸೌಧದಲ್ಲಿರುವ ಶಾಸಕರ ಕಚೇರಿಯಲ್ಲಿ ಸೋಮವಾರ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ತಾಲ್ಲೂಕಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳು ಸಂಪೂರ್ಣ ಅವ್ಯವಸ್ಥೆಯಿಂದ ಕೂಡಿವೆ ಎಂಬ ದೂರುಗಳು ಬಂದಿವೆ.ಮುಂಬರುವ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಇಲಾಖೆಯ ವಿಸ್ತೀರ್ಣಾಧಿಕಾರಿ ವಿ.ಬಿ.ಹಿರೇಗೌಡ ಅವರಿಗೆ ಕಟ್ಟುನಿಟ್ಟಾಗಿ ಸೂಚಿಸಿದರು.

ADVERTISEMENT

‘ಅಂಗನವಾಡಿ ಕೇಂದ್ರಗಳಿಗೆ ಗುಣಮಟ್ಟದ ಆಹಾರ ಪೂರೈಸಬೇಕು. ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕು. ಅಂಗನವಾಡಿ ಕೇಂದ್ರಗಳಿಗೆ ಕಡ್ಡಾಯವಾಗಿ ಭೇಟಿ ನೀಡಬೇಕು’ ಎಂದು ಶಿಶು ಅಭಿವೃದ್ಧಿ ಯೋಜನಾಧಿ
ಕಾರಿ ಶಿವಪ್ರಕಾಶ ಹಿರೇಮಠ ಅವರಿಗೆ ಶಾಸಕರು ಸೂಚಿಸಿದರು.

‘ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿರುವ ಮಕ್ಕಳಿಗೆ ಗುಣಮಟ್ಟದ ಹಾಗೂ ಪೌಷ್ಟಿಕ ಆಹಾರ ನೀಡಬೇಕು’ ಎಂದು ಶಾಸಕರು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಅಶೋಕ ನಾಯಕ ಅವರಿಗೆತಾಕೀತು ಮಾಡಿದರು.

‘ಪಶು ಸಂಗೋಪನಾ ಇಲಾಖೆಯಿಂದ ಸಂಚಾರಿ ಆರೋಗ್ಯ ಶಿಬಿರ ನಡೆಸಲಾಗುತ್ತಿದೆ. ಈ ಕುರಿತು ರೈತರಿಗೆ ಸಮರ್ಪಕವಾಗಿ ಮಾಹಿತಿ ನೀಡಬೇಕು. ಪಶು ಚಿಕಿತ್ಸಾ ಕೇಂದ್ರಗಳನ್ನು ಸ್ಥಾಪಿಸುವ ಕುರಿತು ತಮಗೆ ಸಂಪೂರ್ಣ ಮಾಹಿತಿ ನೀಡಬೇಕು’ ಎಂದು ಶಾಸಕರು ಪಶು ಸಂಗೋಪನಾ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ನಂತರ ಶಾಸಕ ಡಾ.ಅಜಯಸಿಂಗ್ ಅವರು ಕೃಷಿ, ತೋಟಗಾರಿಕೆ, ಕೈಗಾರಿಕೆ, ರೇಷ್ಮೆ, ಕಂದಾಯ, ಶಿಕ್ಷಣ, ಆಹಾರ ಮತ್ತು ನಾಗರಿಕ ಸರಬುರಾಜು, ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ಸಭೆಯಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಚಂದಮ್ಮ ಸಂಗಣ್ಣ ಇಟಗಾ,ಉಪಾಧ್ಯಕ್ಷ ಗೊಲ್ಲಾಳಪ್ಪ ಪೂಜಾರಿ ಕರಕಿಹಳ್ಳಿ, ಕಾರ್ಯ ನಿರ್ವಾಹಕ ಅಧಿಕಾರಿ ಶಾಂತಪ್ಪಟಕ್ಕಳಕಿ, ಜೇವರ್ಗಿ ತಹಶೀಲ್ದಾರ್ ಸಿದ್ದರಾಯ ಭೋಸಗಿ, ಯಡ್ರಾಮಿ ತಹಶೀಲ್ದಾರ್ ಬಸಲಿಂಗಪ್ಪ ನಾಯಿಕೋಡಿ, ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಅಶೋಕ ನಾಯಕ, ತಾಲ್ಲೂಕುಆರೋಗ್ಯಾಧಿಕಾರಿ ಡಾ.ಸಿದ್ದುಪಾಟೀಲ ಸೇರಿದಂತೆ ತಾಲ್ಲೂಕು
ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.