ADVERTISEMENT

‘ನೀರಿನ ಸಮಸ್ಯೆ ಬಗೆಹರಿಸಿ’

ಆಳಂದ; ತಾಲ್ಲೂಕು ಮಟ್ಟದ ಅಧಿಕಾರಿಗಳ ತುರ್ತು ಸಭೆ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2020, 12:16 IST
Last Updated 14 ಮಾರ್ಚ್ 2020, 12:16 IST
ಚಿತ್ರ13ಎಎಲಡಿ2:ಆಳಂದದ ತಹಶೀಲ್ದಾರ್ ಕಚೇರಿಯಲ್ಲಿ ಶಾಸಕ ಸುಭಾಷ ಗುತ್ತೇದಾರ ಅಧ್ಯಕ್ಷತೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ತಾಲ್ಲೂಕು ಮಟ್ಟದ ಅಧಿಕಾರಿಗಳ ತುರ್ತು ಸಭೆ ನಡೆಯಿತು
ಚಿತ್ರ13ಎಎಲಡಿ2:ಆಳಂದದ ತಹಶೀಲ್ದಾರ್ ಕಚೇರಿಯಲ್ಲಿ ಶಾಸಕ ಸುಭಾಷ ಗುತ್ತೇದಾರ ಅಧ್ಯಕ್ಷತೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ತಾಲ್ಲೂಕು ಮಟ್ಟದ ಅಧಿಕಾರಿಗಳ ತುರ್ತು ಸಭೆ ನಡೆಯಿತು   

ಆಳಂದ: ‘ತಾಲ್ಲೂಕಿನ ಯಾವ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ, ಅದರ ನಿವಾರಣೆಗಾಗಿ ಯಾವ ಕ್ರಮ ಕೈಗೊಳ್ಳಬೇಕು ಎಂಬ ಮಾಹಿತಿಯನ್ನು ಒಂದು ವಾರದಲ್ಲಿ ಸಲ್ಲಿಸಬೇಕು’ ಎಂದು ಶಾಸಕ ಸುಭಾಷ ಗುತ್ತೇದಾರ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ಕುಡಿಯುವ ನೀರಿನ ಸಮಸ್ಯೆ ಕುರಿತ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಮಾಡಿಯಾಳ, ಮಾದನ ಹಿಪ್ಪರಗಾ, ಯಳಸಂಗಿ, ಕಡಗಂಚಿ ಮತ್ತಿತರ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಇದೆ. ಇನ್ನುಳಿದ ಗ್ರಾಮದಲ್ಲಿ ಬೇಸಿಗೆಯಲ್ಲಿ ನೀರಿನ ಕೊರತೆ ಕಾಡದಿರಲು ಅಗತ್ಯ ಕ್ರಮ ಕೈಗೊಳ್ಳಲು ಸಿದ್ದತೆ ನಡೆಸಬೇಕು’ ಎಂದು ಸೂಚಿಸಿದರು.

ADVERTISEMENT

‘ನೀರಿನ ಸಮಸ್ಯೆಯುಳ್ಳ ಗ್ರಾಮಗಳಲ್ಲಿ ಕೊಳವೆಬಾವಿ, ಬಾವಿ ಹಾಕಬೇಕು. ಹಲವು ಗ್ರಾಮಗಳಲ್ಲಿ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ. ಪೈಪ್‌ಲೈನ್‌, ಮೋಟರ್‌ ದುರಸ್ತಿ ಹಾಗೂ ವಿದ್ಯುತ್‌ ಸಮಸ್ಯೆ ಕುರಿತುಪಂಚಾಯಿತಿ ಅಧಿಕಾರಿಗಳಿಂದ ಮಾಹಿತಿ ಪಡೆಯಬೇಕು’ ಎಂದರು.

‘ತಾಲ್ಲೂಕಿನಲ್ಲಿರುವ 58 ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ 20 ಘಟಕಗಳು ಮಾತ್ರ ಚಾಲ್ತಿಯಲ್ಲಿವೆ. ಕೆಟ್ಟುಹೋದ ಘಟಕಗಳನ್ನು ದುರಸ್ತಿ ಮಾಡಬೇಕು. ಕಳೆದ ವರ್ಷದ ಬೇಸಿಗೆಯಲ್ಲಿ ಟ್ಯಾಂಕರ್‌ ಮೂಲಕ ನೀರು ಪೂರೈಕೆ ಮಾಡಿದವರ ಬಾಕಿ ಪಾವತಿಗೆ ಕ್ರಮ ಕೈಗೊಳ್ಳಬೇಕು. ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಲಿದ್ದು, ಜನರು ತೊಂದರೆಗೆ ಒಳಗಾಗದಂತೆ ನೋಡಿಕೊಳ್ಳಬೇಕು. ಅವರ ಮನವಿಗಳಿಗೆ ಸ್ಂದಿಸಬೇಕು’ ಎಂದು ಅವರು ತಹಶೀಲ್ದಾರ್ ದಯಾನಂದ ಪಾಟೀಲರಿಗೆ ಸೂಚಿಸಿದರು.

ಆರ್‌ಡಿಡಬ್ಲೂಎಸ್‌ ಅಧಿಕಾರಿ ಚಂದ್ರಕಾಂತ ಅವರಿಂದ ಶುದ್ದಕುಡಿಯುವ ನೀರಿನ ಘಟಕದ ಕುರಿತು ಮಾಹಿತಿ ಪಡೆದರು.

ತಾ.ಪಂ ಇಒ ಡಾ.ಸಂಜಯ ರೆಡ್ಡಿ, ಎಇಇ ಈರಣ್ಣಾ, ಶ್ರೀನಿವಾಸ್ ಕುಲಕರ್ಣಿ, ಶಂಕರ ಹತ್ತರಕಿ, ಮುಖಂಡರಾದ ಮಲ್ಲಣ್ಣಾ ನಾಗೂರೆ, ಅಶೋಕ ಗುತ್ತೇದಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.