ಕಲಬುರ್ಗಿ:ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಹಾಗೂ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ವತಿಯಿಂದ ಜನವರಿ 8ರಂದು ರಾಜ್ಯದಾದ್ಯಂತ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಅಂಗನವಾಡಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಶಾಂತಾ ಘಂಟಿ ಹಾಗೂ ಜಿಲ್ಲಾ ಘಟಕದ ಅಧ್ಯಕ್ಷೆ ಗೌರಮ್ಮ ಪಾಟೀಲ ತಿಳಿಸಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಅವರು, 45 ಮತ್ತು 46ನೇ ಭಾರತೀಯ ಕಾರ್ಮಿಕ ಸಮ್ಮೇಳನದ ಶಿಫಾರಸುಗಳನ್ನು ಜಾರಿಗೊಳಿಸಬೇಕು. ಕನಿಷ್ಠ ಕೂಲಿ ತಿಂಗಳಿಗೆ ₹ 21 ಸಾವಿರಕ್ಕಿಂತ ಕಡಿಮೆ ಇಲ್ಲದಂತೆ ನಿಗದಿ ಮಾಡಬೇಕು. ಸಾಮಾಜಿಕ ಭದ್ರತೆಯ ಸೌಲಭ್ಯಗಳನ್ನು ನಿವೃತ್ತಿ ವೇತನ ಸೇರಿದಂತೆ ಪ್ರತಿ ತಿಂಗಳು ₹ 10 ಸಾವಿರಕ್ಕೆ ಕಡಿಮೆ ಇಲ್ಲದಂತೆ ನೀಡಬೇಕು. ಸಮಗ್ರ ಶಿಶು ಅಭಿವೃದ್ಧಿ ಯೋಜನೆ (ಐಸಿಡಿಎಸ್)ಯನ್ನು ಖಾಸಗಿಕರಣ ಮಾಡಬಾರದು ಎಂದು ಒತ್ತಾಯಿಸಿದರು.
ಉಳ್ಳಾಗಡ್ಡಿ, ತೈಲ ಬೆಲೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಗಳ ಏರಿಕೆಯನ್ನು ತಡೆಯಬೇಕು. ಕಾರ್ಮಿಕ ವಿರೋಧಿ ಕಾರ್ಮಿಕ ಮಸೂದೆಯನ್ನು ರದ್ದುಪಡಿಸಬೇಕು. ಗುತ್ತಿಗೆ ಹಾಗೂ ಹೊರಗುತ್ತಿಗೆ ಕಾರ್ಮಿಕರನ್ನು ಕಾಯಂಗೊಳಿಸಬೇಕು. ಬಿಪಿಸಿಎಲ್ನಂತಹ ಸಾರ್ವಜನಿಕ ಉದ್ಯಮಗಳ ಖಾಸಗೀಕರಣವನ್ನು ನಿಲ್ಲಿಸಬೇಕು. ಆಶಾ ಅಂಗನವಾಡಿ ಹಾಗೂ ಅಕ್ಷರ ದಾಸೋಹ ಸೇರಿದಂತೆ ಸ್ಕೀಂ ನೌಕರರನ್ನು ಕಾಯಂ ಮಾಡಬೇಕು. ರೈತರ ಕಲ್ಯಾಣಕ್ಕಾಗಿ ಕಾನೂನು ರೂಪಿಸಬೇಕು. ಡಾ.ಎಂ.ಎಸ್.ಸ್ವಾಮಿನಾಥನ್ ಆಯೋಗದ ವರದಿ ಅನುಸರಿಸಿ ಭೂಮಿ ಬಾಡಿಗೆ, ಕುಟುಂಬದ ಶ್ರಮ ನಿರ್ಧರಿಸಿ ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಬೇಕು ಎಂದು ಆಗ್ರಹಿಸಿದರು.
ಗಂಗಮ್ಮ ಬಿರಾದಾರ, ಶೇಖಮ್ಮ ಚಿತ್ತಾಪುರ, ಹುಲಸುಂಬಿ ಶೇಖ್, ಶೀಲಾ ಕುಲಕರ್ಣಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.