
ಕಲಬುರಗಿ: ‘ಕಮಲಾಪುರ ತಾಲ್ಲೂಕಿನಲ್ಲಿ ನಡೆದ ಪೋಕ್ಸೊ ಪ್ರಕರಣದ ಆರೋಪಿಗಳನ್ನು ಪೊಲೀಸರು
ರಕ್ಷಿಸುತ್ತಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿ ಸತ್ಯಶೋಧಕ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.
ಆರೋಪಿಗಳು ಅಕ್ರಮ ಕೂಟ ರಚಿಸಿಕೊಂಡು ಸಂತ್ರಸ್ತೆಯ ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಕುರಿತು ದೂರು ನೀಡಲಾಗಿದೆ. ಆದರೂ ರಾಜಕೀಯ ಮುಖಂಡ ಮಲ್ಲಿನಾಥ ಪಾಟೀಲ ಸೊಂತ ಅವರ ಒತ್ತಡಕ್ಕೆ ಮಣಿದು ಅವರ ಮೇಲೆ ಕ್ರಮ ಕೈಗೊಂಡಿಲ್ಲ. ಆರೋಪಿಯನ್ನು ರಕ್ಷಣೆ ಮಾಡುತ್ತಿದ್ದಾರೆ. ಅಲ್ಲದೆ, ಸಂತ್ರಸ್ತೆ, ಕುಟುಂಬಸ್ಥರು ಹಾಗೂ ಪ್ರಕರಣದ ಸಾಕ್ಷಿದಾರರ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿದರು.
ಪ್ರಕರಣದ ತನಿಖೆಗೆ ದಕ್ಷ ಪೊಲೀಸ್ ಅಧಿಕಾರಿಯನ್ನು ನೇಮಿಸಬೇಕು. ಸುಳ್ಳು ಪ್ರಕರಣವನ್ನು ವಾಪಸ್ ಪಡೆಯಬೇಕು. ಆರೋಪಿಗಳನ್ನು ಗೂಂಡಾ ಕಾಯ್ದೆಯಡಿ ಬಂಧಿಸಬೇಕು. ಕಮಲಾಪುರ ವೃತ್ತ ನಿರೀಕ್ಷಕ ನಾರಾಯಣ ಹಾಗೂ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಬಿಂದುರಾಣಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.