ಕಲಬುರಗಿ: ‘ಮಹಾದೇವಪ್ಪ ಕಡೇಚೂರ ಅಭಿನಂದನಾ ಸಮಿತಿ ವತಿಯಿಂದ ಹೈದರಾಬಾದ್ ಸಂಸ್ಥಾನ ವಿಮೋಚನಾ ಹೋರಾಟಗಾರ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಹಾದೇವಪ್ಪ ಕಡೇಚೂರ ಅವರ ಅಭಿನಂದನಾ ಸಮಾರಂಭ ಜುಲೈ 24ರಂದು ಬೆಳಿಗ್ಗೆ 11ಕ್ಕೆ ನಡೆಯಲಿದೆ’ ಎಂದು ಸಮಿತಿಯ ಅಧ್ಯಕ್ಷರೂ ಆಗಿರುವ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ ತಿಳಿಸಿದರು.
‘ನಗರದ ಡಾ.ಎಸ್.ಎಂ ಪಂಡಿತ ರಂಗಮಂದಿರದಲ್ಲಿ ನಡೆಯುವ ಸಮಾರಂಭದಲ್ಲಿ ‘ಅನನ್ಯ ಮಹಾದೇವ’ ಅಭಿನಂದನಾ ಗ್ರಂಥ ಹಾಗೂ ‘ಹೈದರಾಬಾದ್ ಸಂಸ್ಥಾನ ವಿಮೋಚನಾ ಹೋರಾಟದ ದಿಗ್ಗಜರು’ ಎಂಬ ಕೃತಿ ಬಿಡುಗಡೆ ಮಾಡಲಾಗುವುದು‘ ಎಂದು ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
‘ಮಹಾದೇವಪ್ಪ ಕಡೇಚೂರ ಅವರು 70 ವರ್ಷಗಳ ಅವಧಿಯಲ್ಲಿ ದೇಶ ಸೇವೆಯಲ್ಲಿ ತೊಡಗುವುದರ ಜೊತೆಗೆ ಜಿಲ್ಲೆಯಲ್ಲಿ ಬಿಜೆಪಿಯನ್ನು ತಳ ಮಟ್ಟದಿಂದ ಕಟ್ಟಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಆರ್ಯ ಈಡಿಗ ಸಮಾಜದ ಅಭಿವೃದ್ಧಿಗೆ ನಿಸ್ವಾರ್ಥ ಸೇವೆ ಸಲ್ಲಿಸಿದ್ದು, ಇತರೆ ಸಮಾಜಗಳಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವರ ಬದುಕಿನ ಆದರ್ಶಗಳನ್ನು ದಾಖಲಿಸಿ, ಮುಂದಿನ ಜನಾಂಗಕ್ಕೆ ತಿಳಿಸಲು ಈ ಸಮಾರಂಭ ಆಯೋಜಿಸಲಾಗಿದೆ’ ಎಂದು ಅವರು ಹೇಳಿದರು.
ಅನನ್ಯ ಮಹಾದೇವ ಗ್ರಂಥದ ಸಂಪಾದಕ ಡಾ.ಚಿ.ಸಿ. ನಿಂಗಣ್ಣ ಮಾತನಾಡಿ, ‘ಅಂದಿನ ಕಾರ್ಯಕ್ರಮವನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಹಾಗೂ ಸಂಸದ ಡಾ.ಉಮೇಶ ಜಾಧವ ಅವರು ಗ್ರಂಥಗಳನ್ನು ಬಿಡುಗಡೆ ಮಾಡುವರು. ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಡಾ.ಬಸವರಾಜ ಪಾಟೀಲ ಸೇಡಂ ಅಧ್ಯಕ್ಷತೆ ವಹಿಸುವರು’ ಎಂದರು.
‘ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ದಯಾನಂದ ಅಗಸರ, ರಾಜ್ಯ ಗ್ರಂಥಾಲಯ ನಿರ್ದೇಶಕ ಡಾ.ಸತೀಶ ಕುಮಾರ ಹೊಸಮನಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಪ್ರಾಧ್ಯಾಪಕ ಕಲ್ಯಾಣರಾವ ಜಿ.ಪಾಟೀಲ ಗ್ರಂಥಗಳ ಕುರಿತು ಪರಿಚಯ ಮಾಡಿಕೊಡುವರು’ ಎಂದರು.
ಗ್ರಂಥ ಸಂಪಾದಕ ಡಾ.ಸದಾನಂದ ಪೆರ್ಲ, ಸಮಿತಿಯ ಕೋಶಾಧ್ಯಕ್ಷ ವೆಂಕಟೇಶ ಎಂ.ಕಡೇಚೂರ ಪತ್ರಿಕಾ
ಗೊಷ್ಠಿಯಲ್ಲಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.