ಕಲಬುರ್ಗಿ: ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿರುವ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ವಿವಿಧ ಮಠಾಧೀಶರು ಸ್ವಾಗತಿಸಿದ್ದು, ಇದನ್ನು ಬೆಂಬಲಿಸಿ ನಗರದಲ್ಲಿ ಬುಧವಾರ ಜಿಲ್ಲಾಧಿಕಾರಿ ಅವರಿಗೂ ಮನವಿ ಸಲ್ಲಿಸಿದರು.
ನಂತರ ಗೋದುತಾಯಿ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಶ್ರೀರಾಮಸೇನೆ ರಾಜ್ಯ ಅಧ್ಯಕ್ಷರೂ ಆಗಿರುವ, ಅಂದೋಲಾ ಕರುಣೇಶ್ವರ ಮಠದ ಸಿದ್ಧಲಿಂಗ ಸ್ವಾಮೀಜಿ, ‘ಪೌರತ್ವ ಕಾಯ್ದೆಯನ್ನು ರಾಷ್ಟ್ರದ ರಕ್ಷಣೆಯ ಸಲುವಾಗಿ ಜಾರಿಗೆ ತರಲಾಗಿದೆ. ಹೀಗಾಗಿ ಜಿಲ್ಲೆಯ ಮಠಾಧೀಶರು ಇದನ್ನು ಸ್ವಾಗತಿಸುತ್ತೇವೆ. ಇದನ್ನುವಿರೋಧಿಸಿ ದೇಶದ ಹಲವು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಮತಾಂಧರು ಪ್ರತಿಭಟನೆ ನಡೆಸಿದರು.ಈ ಎಲ್ಲ ಗಲಭೆಗಳ ಹಿಂದೆ ಪಾಕಿಸ್ತಾನದ ಕುತಂತ್ರ ಇದೆ ಎಂಬುದು ಸ್ಪಷ್ಟವಾಗಿದೆ’ ಎಂದು ಆರೋಪಿಸಿದರು.
‘ಈ ದೇಶದ ನಾಗರಿಕರು ಸಂವಿಧಾನಕ್ಕೆ ಬದ್ಧರಾಗಿರಬೇಕು. ವಿಶ್ವವಿದ್ಯಾಲಯದಲ್ಲಿ ಓದುವ ವಿದ್ಯಾರ್ಥಿಗಳು ಅನಾಗಿರಕರಲ್ಲ.ಬುದ್ಧಿವಂತ ವಿದ್ಯಾರ್ಥಿಗಳೇ ಪ್ರತಿಭಟನೆ ಮಾಡಲು ಮುಂದಾದರೆ ಹೇಗೆ’ ಎಂದು ಪ್ರಶ್ನಿಸಿದರು.
‘ತ್ರಿವಳಿ ತಲಾಖ್ ಮತ್ತು ಅಯೋಧ್ಯೆ ವಿಚಾರದಲ್ಲಿ ಗಲಭೆ ಎಬ್ಬಿಸುವುದಕ್ಕೆ ಅವಕಾಶ ಸಿಗಲಿಲ್ಲ. ಹಾಗಾಗಿ ಇವಾಗ ಪೌರತ್ವ ಕಾಯಿದೆ ವಿಚಾರದಲ್ಲಿ ಗಲಭೆ ಎಬ್ಬಿಸಲು ಮುಂದಾಗಿವೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿರೋಧಿಸುವ ಭರದಲ್ಲಿ ವಿರೋಧ ಪಕ್ಷಗಳು ಮತ್ತು ಮತಾಂಧ ವಿಶ್ವವಿದ್ಯಾಲಯಗಳು ಗಲಭೆ ಸೃಷ್ಟಿಸುತ್ತಿವೆ’ ಎಂದು ಟೀಕಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.