ADVERTISEMENT

ಜುಲೈ 3ರಂದು ಗ್ರಾಮಪಂಚಾಯಿತಿಗಳ ಎದುರು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 30 ಜೂನ್ 2020, 9:20 IST
Last Updated 30 ಜೂನ್ 2020, 9:20 IST

ಕಲಬುರ್ಗಿ: ಕೇಂದ್ರ ಸರ್ಕಾರ ಘೋಷಿಸಿದ ₹ 20 ಲಕ್ಷ ಕೋಟಿ ಪ್ಯಾಕೇಜ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಯಾವ ನೆರವನ್ನೂ ನೀಡಿಲ್ಲ. ಇದನ್ನು ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರು, ಕಟ್ಟಡ ಕಾರ್ಮಿಕರು ಹಾಗೂ ಗ್ರಾಮ ಪಂಚಾಯಿತಿ ನೌಕರರ ಸಂಘದಿಂದ ಜುಲೈ 3ರಂದು ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಅಂಗನವಾಡಿ ಕಾರ್ಯಕರ್ತೆಯರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಗೌರಮ್ಮ ಪಾಟೀಲ ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೊರೊನಾ ಪಾಸಿಟಿವ್ ಬಂದ ವ್ಯಕ್ತಿಗಳ ಬಳಿಗೆ ಮೊದಲು ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರನ್ನು ಕಳುಹಿಸುತ್ತಾರೆ. ಆದರೆ, ಅವರಿಗೆ ವಿಶೇಷ ಭತ್ಯೆಯನ್ನು ನೀಡುತ್ತಿಲ್ಲ. ಮಾಸ್ಕ್ ಸಹ ಕಾರ್ಯಕರ್ತೆಯರೇ ಖರೀದಿ ಮಾಡಿ ಹಾಕಿಕೊಳ್ಳಬೇಕಿದೆ. ಕರ್ತವ್ಯದ ಸಂದರ್ಭದಲ್ಲಿ ಮೃತಪಟ್ಟರೆ ₹ 30 ಲಕ್ಷದ ವಿಮೆ ಮಾಡಿಸಲಾಗಿದೆ. ಆದರೆ, ಜೀವಂತವಿದ್ದಾಗ ಏನೂ ಕೊಡುತ್ತಿಲ್ಲ ಎಂದು ಟೀಕಿಸಿದರು.

ಮೂರು ತಿಂಗಳಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವ ಧನವನ್ನು ಕೊಟ್ಟಿಲ್ಲ. ಕೂಡಲೇ ಬಾಕಿ ಹಣವನ್ನು ಬಿಡುಗಡೆ ಮಾಡಬೇಕು. ಅಂಗನವಾಡಿ ಮಕ್ಕಳನ್ನು ಸರ್ಕಾರಿ ಎಲ್‌ಕೆಜಿ, ಯುಕೆಜಿಗೆ ಸೇರಿಸುವ ಪ್ರಕ್ರಿಯೆಯಿಂದ ಹಿಂದೆ ಸರಿಯಬೇಕು. ಕಾರ್ಯಕರ್ತೆಯರಿಗೆ ಕೊರೊನಾ ವಿಶೇಷ ಭತ್ಯೆ ಎಂದು ಮಾಸಿಕ ₹ 7500 ಹೆಚ್ಚುವರಿಯಾಗಿ ನೀಡಬೇಕು ಎಂದು ಒತ್ತಾಯಿಸಿದರು.

ADVERTISEMENT

ಜುಲೈ 3ರಂದು ಅಖಿಲ ಭಾರತ ಮಟ್ಟದ ಬೇಡಿಕೆ ದಿನವನ್ನಾಗಿ ಆಚರಣೆ ಮಾಡಲಾಗುತ್ತಿದ್ದು, ರಾಜ್ಯದ 1800 ಸ್ಥಳಗಳಲ್ಲಿ ಕೊರೊನಾ ಪ್ರಯುಕ್ತ ದೈಹಿಕ ಅಂತರ ಕಾಪಾಡಿಕೊಂಡು ಪ್ರತಿಭಟನೆ ನಡೆಸಲಾಗುವುದು. ಜುಲೈ 10ರಂದು ಮತ್ತೆ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಇಟ್ಟುಕೊಂಡು ರಾಜ್ಯಮಟ್ಟದಲ್ಲಿ ಧರಣಿ ನಡೆಸಲಾಗುವುದು ಎಂದರು.

ಸಂಘಟನೆಯ ಮುಖಂಡರಾದ ಮಾದೇವಿ ಚಿಂಚೋಳಿ, ಶೇಖಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.