ಕಲಬುರಗಿ: ‘371(ಜೆ) ಜಾರಿಗೆ ತಂದಿದ್ದು ಕಾಂಗ್ರೆಸ್ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯನ್ನು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಾಲರಾಜ್ ಗುತ್ತೇದಾರ ಖಂಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಮಾಜಿ ಸಚಿವ ವೈಜನಾಥ ಪಾಟೀಲ್ ಅವರು 371(ಜೆ) ಹೋರಾಟ ಪ್ರಾರಂಭಿಸಿ ಯಶಸ್ವಿಯಾಗಿದ್ದಾರೆ. ಎಲ್ಲ ಶ್ರೇಯಸ್ಸು ಅವರಿಗೆ ಸಲ್ಲುತ್ತದೆ’ ಎಂದಿದ್ದಾರೆ.
‘ಸಚಿವ ಸಂಪುಟ ಸಭೆಯಲ್ಲಿ ತೊಗರಿ ಮಂಡಳಿಗೆ ಬಲಿಷ್ಠ ಸ್ವರೂಪ ನೀಡಬೇಕು. ಕಲಬುರಗಿಯ ರೈಲ್ವೆ ವಿಭಾಗೀಯ ಕಚೇರಿ ಸ್ಥಾಪನೆಗೆ ಸಂಪುಟ ಸಭೆ ಮೂಲಕ ಕೇಂದ್ರದ ಮೇಲೆ ಒತ್ತಡ ತರಬೇಕು. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಗುಳೆ ಹೋಗುವುದನ್ನು ತಪ್ಪಿಸಲು ಕೃಷಿ ಕ್ಷೇತ್ರದಲ್ಲಿ ಮತ್ತು ಕೃಷಿಯೇತರ ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿಗೆ ವಿಶೇಷ ಆದ್ಯತೆ ನೀಡಬೇಕು’ ಎಂದು ಆಗ್ರಹಿಸಿದ್ದಾರೆ.
‘ಕಲ್ಯಾಣ ಕರ್ನಾಟಕ ಪ್ರದೇಶದ ಬೃಹತ್, ಮಧ್ಯಮ ಮತ್ತು ಸಣ್ಣ ನೀರಾವರಿ ಯೋಜನೆಗಳು ಕೃಷ್ಣಾ ಭಾಗ್ಯ ಜಲನಿಗಮದ ವ್ಯಾಪ್ತಿಗೆ ಸೇರಿಸಲು ನಿರ್ಧಾರ ತೆಗೆದುಕೊಳ್ಳಬೇಕು. ಇಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿರ್ಮಿಸಿ ನೀರಿನ ಸದುಪಯೋಗ ಮಾಡಿಕೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.