
ಅಫಜಲಪುರ: ‘ಸರ್ಕಾರಿ ಶಾಲೆಗಳು ಬಡವರು ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉಚಿತ ಮತ್ತು ಗುಣಮಟ್ಟದ ಶಿಕ್ಷಣವನ್ನು ಒದಗಿಸುವ ಬುನಾದಿಯಾಗಿವೆ. ಇವು ಬಿಸಿಯೂಟ, ಸಮವಸ್ತ್ರ, ಪುಸ್ತಕಗಳು ಮತ್ತು ವಿದ್ಯಾರ್ಥಿವೇತನದಂತಹ ಸೌಲಭ್ಯಗಳ ಮೂಲಕ ಸಾಮಾಜಿಕ ಸಮಾನತೆಯನ್ನು ಉತ್ತೇಜಿಸುತ್ತವೆ’ ಎಂದು ಶಾಸಕ ಎಂ.ವೈ.ಪಾಟೀಲ ತಿಳಿಸಿದರು.
ತಾಲ್ಲೂಕಿನ ಬಂದರವಾಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಏರ್ಪಡಿಸಿದ್ದ 75ನೇ ವರ್ಷದ ಅಮೃತ್ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ನಮ್ಮ ತಾಲ್ಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ 75 ವರ್ಷಗಳ ನಂತರ ವಜ್ರ ಮಹೋತ್ಸವ ಕಾರ್ಯಕ್ರಮ ಆಚರಣೆ ಮಾಡಿಕೊಳ್ಳುತ್ತಿದೆ. ಇಲ್ಲಿಯ ಎಸ್ಡಿಎಂಸಿ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಅಲ್ಲದೆ ಶಾಲಾ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಹಳೆ ವಿದ್ಯಾರ್ಥಿಗಳು ಸಾಕಷ್ಟು ಶ್ರಮವಹಿಸಿದ್ದು, ಈ ಶಾಲೆ ಶತಮಾನೋತ್ಸವ ಆಚರಣೆ ಮಾಡಿಕೊಳ್ಳಲಿ’ ಎಂದು ಹಾರೈಸಿದರು.
ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ ಮಾತನಾಡಿ, ‘ಕಾರ್ಯಕ್ರಮಕ್ಕೆ ₹ 8 ಲಕ್ಷ ಹಣ ಸಂಗ್ರಹ ಮಾಡಿ ಅದರಲ್ಲಿ ₹ 3 ಲಕ್ಷ ಖರ್ಚು ಮಾಡಿ ಉಳಿದ ₹ 5 ಲಕ್ಷದಲ್ಲಿ ಹೈಟೆಕ್ ಗ್ರಂಥಾಲಯ ನಿರ್ಮಾಣ ಮಾಡಿರುವುದು ಮೆಚ್ಚುವಂತದ್ದು. ಬಂದರವಾಡ ರಾಜ್ಯಕ್ಕೆ ಮಾದರಿ ಗ್ರಾಮವಾಗಲಿ’ ಎಂದು ಶುಭಕೋರಿದರು.
ಸಾನ್ನಿಧ್ಯವನ್ನು ಶಾಂತವೀರ ಶಿವಾಚಾರ್ಯರು ವಹಿಸಿದ್ದರು. ಚೌಡಾಪೂರ ಚಿನ್ಮಯಗಿರಿ ಮಹಾಂತೇಶ್ವರ ಮಠದ ವೀರಮಹಾಂತ ಶಿವಾಚಾರ್ಯರು, ಹಸರಗುಂಡಗಿ ಮಹ್ಮದ್ ಮಾಲಾಲಿ ಮುತ್ಯಾ ಅವರು ಆಶೀರ್ವಚನ ನೀಡಿದರು. ರಾಜ್ಯ ಕಾಂಗ್ರೆಸ್ ಹಿಂದುಳಿದ ವರ್ಗದ ಉಪಾಧ್ಯಕ್ಷ ಜೆ.ಎಂ.ಕೊರಬು, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಕುಮಾರ ನಾಟೀಕಾರ, ಮಾಜಿ ಜಿ.ಪಂ ಸದಸ್ಯ ಮತೀನ್ ಪಟೇಲ್, ಬಿಇಒ ವಿ.ವೈ.ಗುಡಮಿ, ಅಕ್ಷರ ದಾಸೋಹ ಅಧಿಕಾರಿ ನಿಂಗಣ್ಣ ಸಣ್ಣಕ್ಕಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಜಿಲ್ಲಾಧ್ಯಕ್ಷ ಮಲ್ಲಯ್ಯ ಗುತ್ತೇದಾರ, ತಾಲ್ಲೂಕು ರಾಜ್ಯ ನೌಕರರ ಸಂಘ ಅಧ್ಯಕ್ಷ ಸಂಜೀವ ಬಗಲಿ, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗಾಂಧಿ ದಫೇದಾರ ಸೇರಿದಂತೆ ಇತರರು ಇದ್ದರು. ಅರ್ಚನಾ ಜೈನ್ ನಿರೂಪಿಸಿ, ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.