ಕಲಬುರ್ಗಿ: ‘ಹೊಸ ಸಚಿವ ಸಂಪುಟದಲ್ಲಿ ಕಲಬುರ್ಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮೂಡ ಅವರಿಗೆ ಸ್ಥಾನ ನೀಡಬೇಕು ಎಂದು ಆಗ್ರಹಿಸಿ, ಶೀಘ್ರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಳಿಗೆ ನಿಯೋಗ ಹೋಗಲಾಗುವುದು’ ಎಂದು ಮಾದಿಗ ಸಂಘಟನೆಗಳ ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ದಶರಥ ಎಂ. ಕಲಗುರ್ತಿ ಹೇಳಿದರು.
‘ಮತ್ತಿಮೂಡ ಅವರು ಹಿಂದುಳಿದ ಸಮಾಜವನ್ನು ಪ್ರತಿನಿಧಿಸುವ ಶಾಸಕರು. ಎರಡು ವರ್ಷಗಳ ಲಾಕ್ಡೌನ್ ಸಂದರ್ಭದಲ್ಲಿಯೂ ಬಡವರಿಗೆ ಅನ್ನ, ಆರ್ಥಿಕ ನೆರವು ನೀಡಿದ್ದಾರೆ. ಬಿಜೆಪಿ ತತ್ವಗಳಿಗೆ ನಿಷ್ಠರಾಗಿದ್ದುಕೊಂಡು ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸದಲ್ಲಿ ತೊಡಗಿದ್ದಾರೆ. ಅವರಿಗೆ ಸಚಿವ ಸ್ಥಾಜನ ಕೊಟ್ಟರೆ ಸಮಾಜದ ಏಳಿಗೆಗೆ ದೊಡ್ಡ ಶಕ್ತಿ ಸಿಕ್ಕಂತಾಗುತ್ತದೆ’ ಎಂದು ಅವರು ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
‘ಈ ಹಿಂದೆ ಮಾದಿಗ ಸಮುದಾಯಕ್ಕೆ ಅನ್ಯಾಯ ಮಾಡಿದಾಗ ಕಾಂಗ್ರೆಸ್ಗೆ ಎಂಥ ಪರಿಸ್ಥಿತಿ ಬಂದಿತು ಎಂದು ಎಲ್ಲರಿಗೂ ಗೊತ್ತಿದೆ. ಬಿಜೆಪಿ ಸರ್ಕಾರದಲ್ಲೂ ಇದು ಮುಂದುವರಿಯಬಾರದು ಎಂಬುದು ನಮ್ಮ ಕೋರಿಕೆ. ಹೊಸ ಮುಖ್ಯಮಂತ್ರಿಗಳು ಜಿಲ್ಲೆಗೆ ಸಚಿವ ಸ್ಥಾನ ನೀಡುವುದಾದರೆ ಮತ್ತಿಮೂಡ ಅವರಿಗೆ ಪ್ರಾಧಾನ್ಯತೆ ನೀಡಬೇಕು’ ಎಂದೂ ಆಗ್ರಹಿಸಿದರು.
ಕರ್ನಾಟಕ ಮಾದಿಗ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸುನೀಲ ಸಲಗರ, ಮಾದಾರ ಚನ್ನಯ್ಯ ಹೋರಾಟ ಸಮಿತಿ ಅಧ್ಯಕ್ಷ ಅಮೃತ ಸಾಗರ, ಎಂಆರ್ಎಚ್ಎಸ್ ನಗರ ಘಟಕದ ಅಧ್ಯಕ್ಷ ಸಂಜೀವಕುಮಾರ ಮಾಳಗಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.