ಯಲಬುರ್ಗಾ: ತಾಲ್ಲೂಕಿನ ಗುನ್ನಾಳ ಗ್ರಾಮದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಹಾಗೂ ಪಟ್ಟಣದ ಹೊರವಲಯದಲ್ಲಿರುವ ಕೊಪ್ಪಳ ವಿ.ವಿ ಸ್ನಾತಕೋತ್ತರ ಅಧ್ಯಯನ ಕೇಂದ್ರಕ್ಕೆ ಗುರುವಾರ ಶಾಸಕ ಬಸವರಾಜ ರಾಯರಡ್ಡಿ ಭೇಟಿ ನೀಡಿ ಪರಿಶೀಲಿಸಿದರು.
ಕಾಲೇಜಿನ ಮುಖ್ಯಸ್ಥರೊಂದಿಗೆ ಅಗತ್ಯ ಸೌಲಭ್ಯ ಹಾಗೂ ಸಿಬ್ಬಂದಿ ಕುರಿತು ಮಾಹಿತಿ ಸಂಗ್ರಹಿಸಿ ಅಭಿವೃದ್ಧಿಗೆ ಬೇಕಾದ ಅಗತ್ಯ ಕ್ರಮಗಳ ಬಗ್ಗೆ ಚರ್ಚಿಸಿದರು.
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಉನ್ನತಮಟ್ಟದ ಹಾಗೂ ಗುಣಮಟ್ಟದ ಶಿಕ್ಷಣದ ಅನುಕೂಲ ಕಲ್ಪಿಸಿಕೊಡಲು ಗುನ್ನಾಳ ಗ್ರಾಮದಲ್ಲಿ ಡಿಪ್ಲೋಮಾ ಕೋರ್ಸ್ಗಳನ್ನು ಪ್ರಾರಂಭಿಸಲಾಗಿದೆ. ಇದರ ಪ್ರಯೋಜನ ಪಡೆದುಕೊಳ್ಳುವಂತೆ ಗ್ರಾಮದ ವಿದ್ಯಾರ್ಥಿಗಳಿಗೆ ಪ್ರೇರೇಪಿಸಬೇಕು ಎಂದು ಸಲಹೆ ನೀಡಿದರು.
ಸ್ಥಳೀಯ ಪಿಜಿ ಕೇಂದ್ರಕ್ಕೆ ಸೌಲಭ್ಯಗಳ ಜತೆ ವಸತಿ ನಿಯಲ ಹಾಗೂ ಇನ್ನಿತರ ಅವಶ್ಯಕತೆಗಳನ್ನು ಒದಗಿಸಲಾಗುವುದು, ಮಾದರಿ ಕೇಂದ್ರವನ್ನಾಗಿ ಮಾಡಲು ಅಗತ್ಯ ಕ್ರಮಕೈಗೊಳ್ಳಲಾಗುತ್ತದೆ. ಅದಕ್ಕೆ ತಕ್ಕಂತೆ ಕೇಂದ್ರವನ್ನು ಮುನ್ನೆಡೆಸಿಕೊಂಡು ಹೋಗುವುದು ಮತ್ತು ಅಭಿವೃದ್ಧಿಗೊಳಿಸುವುದು ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳ ಮೇಲಿದೆ ಎಂದು ಹೇಳಿದರು.
ಕೊಪ್ಪಳ ವಿಶ್ವವಿದ್ಯಾಲಯದ ಕುಲಸಚಿವ ಕೆ.ವಿ. ಪ್ರಸಾದ, ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಪ್ರಕಾಶ ಎಳವಟ್ಟಿ, ಪ್ರಾಧ್ಯಾಪಕ ಬಸವರಾಜ ಈಳಿಗನೂರ, ಕೊಪ್ಪಳದ ಕೇಂದ್ರದ ಸಿ.ಐ.ಛಲವಾದಿ, ಮುಖಂಡರಾದ ಸುಧೀರ ಕೊರ್ಲಳ್ಳಿ, ಶರಣಪ್ಪ ಗಾಂಜಿ, ಡಾ.ಶಿವನಗೌಡ ದಾನರಡ್ಡಿ, ಮಲ್ಲು ಜಕ್ಕಲಿ, ಅಪ್ಪಣ್ಣ ಜೋಶಿ, ರುದ್ರಪ್ಪ ಮರಕಟ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.