ADVERTISEMENT

ಕೆಂಪಣ್ಣ ಮಾನಸಿಕ ಸ್ಥಿಮಿತ ಕಳೆದುಕೊಂಡಿರಬಹುದು: ಸಚಿವ ಬಿ.ಸಿ. ಪಾಟೀಲ ಟೀಕೆ

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2022, 7:55 IST
Last Updated 26 ಆಗಸ್ಟ್ 2022, 7:55 IST
ಬಿ.ಸಿ. ಪಾಟೀಲ
ಬಿ.ಸಿ. ಪಾಟೀಲ   

ಕಲಬುರಗಿ: ರಾಜ್ಯ ಸರ್ಕಾರ ಶೇ 40ರಷ್ಟು ಪರ್ಸೆಂಟೇಜ್ ಪಡೆಯುತ್ತಿದೆ ಎಂದು ಯಾವುದೇ ದಾಖಲೆ ಇಲ್ಲದೇ ಆರೋಪಿಸುವುದನ್ನು ನೋಡಿದರೆ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿರಬಹುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಟೀಕಿಸಿದರು.

ನಗರದಲ್ಲಿ ನೂತನ ಶೀತಲೀಕರಣ ಘಟಕದ ಶಂಕುಸ್ಥಾಪನೆ ಹಾಗೂ ಜಂಟಿ ಕೃಷಿ ನಿರ್ದೇಶಕರ ಕಚೇರಿ ಕಟ್ಟಡ (ಜಾಗೃತ ಕೋಶ) ಉದ್ಘಾಟನೆಗೂ ಮುನ್ನ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಕೆಂಪಣ್ಣ ಅವರು ಸಿದ್ದರಾಮಯ್ಯ ಅವರ ಮನೆಗೆ ಹೋಗಿ ಬಂದ ಬಳಿಕ ಆಪಾದನೆ ಮಾಡಿದ್ದಾರೆ. ಎಲ್ಲ ಶಾಸಕರೂ ಕಮಿಷನ್ ಪಡೆದಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಎಲ್ಲ ಶಾಸಕರು ಎಂದರೆ ಇದರಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರೂ ಬರುತ್ತಾರಲ್ಲವೇ ಎಂದು ಪ್ರಶ್ನಿಸಿದರು.

ADVERTISEMENT

ದಾಖಲೆ ಇಲ್ಲದೇ ಅನಗತ್ಯವಾಗಿ ಆರೋಪ ಮಾಡುತ್ತಿದ್ದಾರೆ. ಹೀಗಾಗಿ ಕೆಂಪಣ್ಣ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ವ್ಯಾಪಕ ‌ಮಳೆಯಿಂದಾಗಿ ಅಪಾರ ಪ್ರಮಾಣದ ‌ಬೆಳೆ ಹಾನಿಯಾಗಿದೆ.‌ ಕಲಬುರಗಿಯಲ್ಲಿ 1.10 ಲಕ್ಷ ಹೆಕ್ಟೇರ್ ಪ್ರದೇಶ ಹಾನಿಯಾಗಿದೆ. ಒಂದು ತಿಂಗಳೊಳಗಾಗಿ ಬೆಳೆ ವಿಮೆಯ ಶೇ 25ರಷ್ಟು ಮೊದಲ ಹಂತದ ‌ಪರಿಹಾರವಾಗಿ ನೀಡಲಾಗುವುದು ಎಂದರು.

ರಾಷ್ಟ್ರೀಯ ಪ್ರಕೃತಿ ‌ವಿಕೋಪ ಪರಿಹಾರ (ಎನ್ ಡಿಆರ್ ಎಫ್) ದಡಿ ಪ್ರತಿ ಹೆಕ್ಟೇರ್ ಬೆಳೆ ಹಾನಿಗೆ ನೀಡಬೇಕಿದ್ದ ₹ 6800 ಪರಿಹಾರವನ್ನು ಮುಖ್ಯಮಂತ್ರಿ ಬಸವರಾಜ ‌ಬೊಮ್ಮಾಯಿ ಸರ್ಕಾರ ₹ 13 ಸಾವಿರಕ್ಕೆ ಹೆಚ್ಚಿಸಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ‌ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ವಿಧಾನಪರಿಷತ್ ಸದಸ್ಯರಾದ ಬಿ.ಜಿ. ಪಾಟೀಲ, ಶಶೀಲ್ ನಮೋಶಿ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.