ADVERTISEMENT

ಖೂಬಾ ನೇತೃತ್ವದ ಜನಾಶೀರ್ವಾದ ಯಾತ್ರೆಯಲ್ಲಿ ಕೋವಿಡ್‌ ನಿಯಮ ಉಲ್ಲಂಘನೆ, ಎಫ್‌ಐಆರ್

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2021, 12:35 IST
Last Updated 18 ಆಗಸ್ಟ್ 2021, 12:35 IST
ಸಚಿವ ಭಗವಂತ ಖೂಬಾ
ಸಚಿವ ಭಗವಂತ ಖೂಬಾ   

ಕಲಬುರ್ಗಿ: ಕೇಂದ್ರದ ನೂತನ ಸಚಿವ ಭಗವಂತ ಖೂಬಾ ನೇತೃತ್ವದಲ್ಲಿ ಮಂಗಳವಾರ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಜನಾಶೀರ್ವಾದ ಯಾತ್ರೆಯಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ನಗರದ ಬ್ರಹ್ಮಪುರ ಠಾಣೆ ಪೊಲೀಸರು ಬಿಜೆಪಿ ಜಿಲ್ಲಾ ಮುಖಂಡರ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.

ಕೋವಿಡ್‌ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಬಹಿರಂಗ ಸಮಾವೇಶ, ರಾಜಕೀಯ ಕಾರ್ಯಕ್ರಮಗಳು ಹಾಗೂ ಹೆಚ್ಚು ಜನರು ಸೇರುವುದಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಆ ನಿರ್ಬಂಧವನ್ನು ಉಲ್ಲಂಘಿಸಿ ಯಾತ್ರೆ ಆಯೋಜಿಸಿದ್ದಲ್ಲದೇ ರಾತ್ರಿ ಕರ್ಫ್ಯೂ ನಿಯಮಗಳನ್ನು ಮೀರಿ ಕಲ್ಯಾಣ ಮಂಟಪದಲ್ಲಿ ಸಭೆ ನಡೆಸಿದ ಪ್ರಯುಕ್ತ ತಹಶೀಲ್ದಾರ್ ಪ್ರಕಾಶ ಕುದರಿ ಪೊಲೀಸರಿಗೆ ದೂರು ನೀಡಿದ್ದರು. ಈ ದೂರನ್ನು ಆಧರಿಸಿ ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿದೆ. ತನಿಖೆ ನಡೆಯುತ್ತಿದೆ ಎಂದು ಕಲಬುರ್ಗಿ ಪೊಲೀಸ್ ಕಮಿಷನರ್ ಡಾ. ವೈ.ಎಸ್. ರವಿಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.

ಜನಾಶೀರ್ವಾದ ಯಾತ್ರೆ ನಿಮಿತ್ತ ನಗರದ ವಿವಿಧೆಡೆ ಸಚಿವರು, ಶಾಸಕರ ಕಟೌಟ್‌ಗಳನ್ನು ಅಳವಡಿಸಲಾಗಿತ್ತು. ನಗರದಲ್ಲಿ ಮಹಾನಗರ ಚುನಾವಣೆ ಪ್ರಯುಕ್ತ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಪಾಲಿಕೆ ಆಯುಕ್ತರು ಅವುಗಳನ್ನು ಮಂಗಳವಾರ ಮಧ್ಯಾಹ್ನವೇ ತೆರವುಗೊಳಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.