ADVERTISEMENT

ಬಿಜೆಪಿಯವರು ಹೋರಾಡಿದ್ದರೆ ಶ್ರೀಗಳಿಗೆ ಭಾರತರತ್ನ ಸಿಗುತ್ತಿತ್ತು–ಪ್ರಿಯಾಂಕ್ ಖರ್ಗೆ

​ಪ್ರಜಾವಾಣಿ ವಾರ್ತೆ
Published 26 ಜನವರಿ 2019, 11:28 IST
Last Updated 26 ಜನವರಿ 2019, 11:28 IST
   

ಕಲಬುರ್ಗಿ: ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರಿಗೆ ನಾನು ಅಗೌರವ ತೋರಿದ್ದೇನೆ ಎಂದು ರಾಜ್ಯ ಬಿಜೆಪಿಯವರು ನನ್ನ ವಿರುದ್ಧ ಹೋರಾಟ ಮಾಡಿದರು. ಆದರೆ, ಇದರ ಅರ್ಧದಷ್ಟು ಒತ್ತಡವನ್ನು ಕೇಂದ್ರದ ಮೇಲೆ ತಂದಿದ್ದರೆ ಶ್ರೀಗಳಿಗೆ ಭಾರತ ರತ್ನ ಸಿಗುತ್ತಿತ್ತು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಶ್ರೀಗಳಿಗೆ ಭಾರತ ರತ್ನ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿತ್ತು. ಈ ಬಾರಿಯೂ ಮನವಿ ಮಾಡಲಾಗಿತ್ತು. ಶ್ರೀಗಳಿಗೆ ಭಾರತ ರತ್ನ ಕೊಟ್ಟರೆ ಒಳ್ಳೆಯದಾಗುತ್ತಿತ್ತು ಎಂದರು.

ADVERTISEMENT

24 ಜನರ ವಿರುದ್ಧ ಎಫ್ಐಆರ್: ರಾಜ್ಯದ ವಿವಿಧೆಡೆಯ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ ಗಳಲ್ಲಿ ಅನಧಿಕೃತವಾಗಿ ವಾಸ್ತವ್ಯ ಮಾಡಿದ್ದ 24 ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಈ ಬಗ್ಗೆ ಅನೇಕರು ಪ್ರಶ್ನಿಸಿದರು. ಆದರೆ, ವ್ಯವಸ್ಥೆಯನ್ನು ಸರಿಪಡಿಸಲು ಇಂತಹ ಕ್ರಮಗಳು ಅನಿವಾರ್ಯ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಹೊರಹಾಕುವ ಪ್ರಶ್ನೆಯೇ ಇಲ್ಲ: ಚಿಂಚೋಳಿ ಕಾಂಗ್ರೆಸ್ ಶಾಸಕ ಡಾ. ಉಮೇಶ ಜಾಧವ ಅವರನ್ನು ಪಕ್ಷದಿಂದ ಹೊರಹಾಕುವ ಪ್ರಶ್ನೆಯೇ ಇಲ್ಲ. ಅವರನ್ನು ಯಾರು, ಏಕೆ ಹೊರ ಹಾಕುತ್ತಾರೆ. ಅವರೊಬ್ಬ ಜವಾಬ್ದಾರಿಯುತ ಶಾಸಕ, ಹಿರಿಯರು. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎಂದು ಹೇಳಿದ್ದಾರೆ. ಅದನ್ನು ಪಕ್ಷದ ವರಿಷ್ಠರು ನೋಡಿಕೊಳ್ಳುತ್ತಾರೆ. ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದು ಬಹಳ ದಿನಗಳಾಗಿಲ್ಲ. ದೊಡ್ಡ ದೊಡ್ಡ ಯೋಜನೆಗಳನ್ನು ಕಾರ್ಯಗತಗೊಳಿಸಲು ಸಮಯ ಬೇಕಾಗುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.