ಕಲಬುರ್ಗಿ: ಸಚಿವ ಪುಟ್ಟರಂಗ ಶೆಟ್ಟಿ ರಾಜೀನಾಮೆ ಹಾಗೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಭಾನುವಾರ ಪ್ರತಿಭಟನೆ ನಡೆಸಲಾಯಿತು.
ವಿಧಾನಸೌಧದ ಆವರಣದಲ್ಲಿ ಸಚಿವರ ಆಪ್ತ ಸಿಬ್ಬಂದಿ ಬಳಿ ₹25.76 ಲಕ್ಷ ನಗದು ಪತ್ತೆಯಾಗಿದೆ. ವಿಧಾನಸೌಧದಲ್ಲಿ ಅಕ್ರಮ ತಡೆಗಟ್ಟಲು ಎಚ್.ಡಿ.ಕುಮಾರಸ್ವಾಮಿ ಅವರು ವಿಧಾನಸೌಧ ಪ್ರವೇಶ ನಿರ್ಬಂಧಿಸಿದ್ದರು. ಆದರೆ, ಈಗ ಸಚಿವರ ಆಪ್ತರ ಬಳಿಯೇ ಅಪಾರ ಪ್ರಮಾಣದ ಹಣ ಪತ್ತೆಯಾಗಿದೆ. ಆದ್ದರಿಂದ ಸಚಿವರು ನೈತಿಕ ಹೊಣೆ ಹೊತ್ತು ಕೂಡಲೇ ರಾಜೀನಾಮೆ ಸಲ್ಲಿಸಬೇಕು ಎಂದು ಒತ್ತಾಯಿಸಿದರು.
ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳಕ್ಕೆ ರಾಜ್ಯ ಸರ್ಕಾರವೇ ಕಾರಣವಾಗಿದೆ. ಎರಡು ತಿಂಗಳಿನಿಂದ ಇಳಿಮುಖವಾಗುತ್ತಿದ್ದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್ಗೆ ₹2 ಹೆಚ್ಚಿಸಲಾಗಿದೆ. ಇದಲ್ಲದೆ, ಈಚೆಗಷ್ಟೇ ವಿದ್ಯುತ್ ದರವನ್ನು ಕೂಡ ಹೆಚ್ಚಿಸಲಾಗಿದೆ. ಇದರಿಂದ ಜನಸಾಮಾನ್ಯರು ಬವಣೆ ಪಡುವಂತಾಗಿದೆ ಎಂದು ಆರೋಪಿಸಿದರು.
ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟದಕ ಅಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಪಾಲಿಕೆ ವಿರೋಧ ಪಕ್ಷದ ನಾಯಕ ವಿಠ್ಠಲ ಜಾಧವ, ಮುಖಂಡರಾದ ಬಸವರಾಜ ಇಂಗಿನ, ಸುಭಾಷ ರಾಠೋಡ, ನಾಮದೇವ ರಾಠೋಡ, ದಯಾಘನ ಧಾರವಾಡಕರ್, ಲಿಂಗರಾಜ ಬಿರಾದಾರ, ಶಿವಯೋಗಿ, ಸಿದ್ರಾಮಪ್ಪ ಬಿರಾದಾರ, ವೀರಭದ್ರಯ್ಯ ಚಿಕ್ಕಮಠ, ಡಾ. ಇಂದಿರಾ ಶಕ್ತಿ ನೇತೃತ್ವ ವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.