ಕಲಬುರ್ಗಿ: ಖಾಸಗಿ ಸುದ್ದಿವಾಹಿನಿಯ ಕ್ಯಾಮೆರಾಮನ್ ನಗರದಲ್ಲಿ ಸೋಮವಾರ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶಹಾಬಾದ್ ತಾಲ್ಲೂಕಿನ ತೊನಸನಹಳ್ಳಿ ಗ್ರಾಮದ ನಿವಾಸಿ ಹಣಮಂತರಾವ್ ಎಸ್.ಟಿ. (42) ರೈಲಿಗೆ ತಲೆಕೊಟ್ಟವರು.
ಸೋಮವಾರ ಮಧ್ಯಾಹ್ನ ಪಿಡಿಎ ಎಂಜಿನಿಯರಿಂಗ್ ಕಾಲೇಜು ಹತ್ತಿರದ ವರ್ತುಲ ರಸ್ತೆಯ ಹೊರ ಸೇತುವೆಯ ಬಳಿ ರೈಲು ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಣಮಂತರಾವ್ ಅವರು ಈ ಹಿಂದೆ ಖಾಸಗಿ ಸುದ್ದಿ ವಾಹಿನಿ ಟಿವಿ–9ನಲ್ಲಿ ಸೇವೆ ಸಲ್ಲಿಸಿದ್ದರು. ಸದ್ಯ ಬೆಂಗಳೂರು ಮೂಲದ ಖಾಸಗಿ ವಾಹಿನಿಯ ಕ್ಯಾಮೆರಾಮನ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಅವರು ಶವದ ಬಳಿ ಸಿಕ್ಕ ಗುರುತಿನ ಚೀಟಿಯಿಂದ ಇದು ಗೊತ್ತಾಗಿದೆ. ಅವರ ರುಂಡ– ಮುಂಡ ತುಂಡಾಗಿದ್ದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಈ ಬಗ್ಗೆ ವಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.