ಕಲಬುರಗಿ: ಜಾತಿಗಣತಿ ವರದಿ ಜಾರಿ ಮಾಡಲು ಹೊರಟಿರುವ ಮುಖ್ಯಮತ ಸಿದ್ದರಾಮಯ್ಯ ಅವರ ಕ್ರಮಕ್ಕೆ ಜೈನ ಸ್ವಾಮೀಜಿ, ಮಡಿವಾಳ ಸ್ವಾಮೀಜಿ, ಕೋಲಿ ಸಮಾಜ ಸೇರಿದಂತೆ ಹಲವು ಸಮಾಜದವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಹಾಗಿದ್ದರೆ ಮುಖ್ಯಮಂತ್ರಿ ಯಾರಿಗೆ ನ್ಯಾಯ ಕೊಡಲು ಹೊರಟಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರಶ್ನಿಸಿದರು.
ನಗರದ ಐವಾನ್ ಇ ಶಾಹಿ ಅತಿಥಿಗೃಹದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದುಳಿದ ಸಮುದಾಯದವರಿಗೆ ನ್ಯಾಯ ಕೊಡಿಸಬೇಕು ಎಂಬುದು ವರದಿಯ ಆಶಯ. ಆದರೆ, ಎಲ್ಲ ಸಮುದಾಯದವರೂ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದರು.
ಮುಖ್ಯಮಂತ್ರಿ ಬಸವಕಲ್ಯಾಣದಲ್ಲಿ ಅನುಭವ ಮಂಟಪವನ್ನು ಪೂರ್ಣಗೊಳಿಸುವುದಾಗಿ ಹೇಳಿದ್ದಾರೆ. ಆದರೆ, ಅದಕ್ಕಿಂತ ಮೊದಲು ತಮ್ಮ ನಡೆನುಡಿಯನ್ನು ತಿದ್ದಿಕೊಳ್ಳಬೇಕು ಎಂದರು.
ಬೀದರ್ ಹಾಗೂ ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಕ್ರಮ ಖಂಡನೀಯ. ರಾಜ್ಯ ಸರ್ಕಾರ ಧಾರ್ಮಿಕ ಮನೋಭಾವನೆಗೆ ಧಕ್ಕೆ ತಂದವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಕಲಬುರಗಿ ಜಿಲ್ಲೆಯಲ್ಲಿ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಕ್ಷೇತ್ರದಲ್ಲೇ ಮರಳು ಅಕ್ರಮ ಸಾಗಾಟ ನಡೆಯುತ್ತಿದೆ. ಸ್ಥಳಕ್ಕೆ ಭೇಟಿ ನೀಡಿದ ನಮಗೆ ಕಾಂಗ್ರೆಸ್ ಕಾರ್ಯಕರ್ತರನ್ನು ಮುಂದೆ ಬಿಟ್ಟು ಹೆದರಿಸುವ ತಂತ್ರ ಮಾಡುತ್ತಿದ್ದಾರೆ. ಇದಕ್ಕೆಲ್ಲ ಹೆದರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ಸದಸ್ಯ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್, ಶಾಸಕರಾದ ಬಸವರಾಜ ಮತ್ತಿಮಡು, ಮಾಜಿ ಸಂಸದ ಡಾ.ಉಮೇಶ ಜಾಧವ್, ಶಾಸಕ ಡಾ.ಅವಿನಾಶ್ ಜಾಧವ್, ಮಾಜಿ ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ಎ.ಎಸ್.ಪಾಟೀಲ ನಡಹಳ್ಳಿ, ರಾಜಕುಮಾರ ಪಾಟೀಲ ತೇಲ್ಕೂರ ಗೋಷ್ಠಯಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.