ADVERTISEMENT

ವಿದ್ಯಾರ್ಥಿ ಕೇಂದ್ರಿತ ಶೈಕ್ಷಣಿಕ ಚಟುವಟಿಕೆ ಸವಾಲಿನದ್ದು; ಪ್ರೊ.ದಯಾನಂದ ಅಗಸರ

​ಪ್ರಜಾವಾಣಿ ವಾರ್ತೆ
Published 28 ಜುಲೈ 2022, 5:05 IST
Last Updated 28 ಜುಲೈ 2022, 5:05 IST
ಕಲಬುರಗಿ ಹೊರವಲಯದ ಸಿಯುಕೆಯ ಕುಲಪತಿಗಳಾಗಿ ಒಂದು ವರ್ಷ ಅಧಿಕಾರಾವಧಿ ಪೂರೈಸಿದ ಪ್ರೊ. ಬಟ್ಟು ಸತ್ಯನಾರಾಯಣ ಅವರನ್ನು ಸನ್ಮಾನಿಸಲಾಯಿತು
ಕಲಬುರಗಿ ಹೊರವಲಯದ ಸಿಯುಕೆಯ ಕುಲಪತಿಗಳಾಗಿ ಒಂದು ವರ್ಷ ಅಧಿಕಾರಾವಧಿ ಪೂರೈಸಿದ ಪ್ರೊ. ಬಟ್ಟು ಸತ್ಯನಾರಾಯಣ ಅವರನ್ನು ಸನ್ಮಾನಿಸಲಾಯಿತು   

ಕಲಬುರಗಿ: ‘ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಎಲ್ಲಾ ಶೈಕ್ಷಣಿಕ ಚಟುವಟಿಕೆಗಳನ್ನು ವಿದ್ಯಾರ್ಥಿ ಕೇಂದ್ರಿತ ಆಗಿಸುವುದು ನಮ್ಮ ಮುಂದಿರುವ ಬಹುದೊಡ್ಡ ಸವಾಲು. ಇದು ಸಂಸ್ಥೆಯ ಬೆಳವಣಿಗೆಗೆ ಅತ್ಯಂತ ಮಹತ್ವಪೂರ್ಣವಾಗಿದೆ’ ಎಂದು ಗುಲಬರ್ಗಾ ವಿಶ್ವವಿದ್ಯಾಲಯ ಕುಲಪತಿ ಪ್ರೊ. ದಯಾನಂದ ಅಗಸರ ಹೇಳಿದರು.

ನಗರದ ಹೊರವಲಯದಲ್ಲಿ ಕಡೇಗಂಚಿ ಬಳಿಯಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (ಸಿಯುಕೆ) ಕುಲಪತಿಯಾಗಿಪ್ರೊ.ಬಟ್ಟು ಸತ್ಯನಾರಾಯಣ ಅವರು ಒಂದು ವರ್ಷ ಪೂರೈಸಿದ ಹಿನ್ನಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಶೈಕ್ಷಣಿಕ ಮತ್ತು ಆಡಳಿತಾತ್ಮಕ ಸವಾಲುಗಳ ಮೇಲೆ ಬೆಳಕು ಚೆಲ್ಲುತ್ತಾ ಮುಂದೆ ಸಾಗಬೇಕಿದೆ’ ಎಂದು ಅವರು ಹೇಳಿದರು.

‘ಪ್ರೊ.ಬಟ್ಟು ಸತ್ಯನಾರಾಯಣ ಅವರು ರಾಷ್ಟ್ರಮಟ್ಟದ ಅಧ್ಯಾಪಕರ ಸಂಘವನ್ನು ಯಶಸ್ವಿಯಾಗಿ ಮುನ್ನಡೆಸಿದ ಸಮರ್ಥ ನಾಯಕ. ಈ ಅನುಭವವೇ ಅವರಿಗೆ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿಯಾಗಿ ಒಂದು ವರ್ಷದ ಅಧಿಕಾರಾವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ನೆರವಾಗಿದೆ’ ಎಂದು ಅಭಿಪ್ರಾಯಪಟ್ಟರು.

ADVERTISEMENT

‘ವಿಶ್ವವಿದ್ಯಾಲಯದ ಅಧಿಕಾರಿಗಳು, ಬೋಧಕ - ಬೋಧಕೇತರ ಸಿಬ್ಬಂದಿ ಉನ್ನತ ಶಿಕ್ಷಣ ಸಂಸ್ಥೆಯಲ್ಲಿನ ಎಲ್ಲಾ ಚಟುವಟಿಕೆಗಳನ್ನು ನಿಯಂತ್ರಿಸುವ ಶಾಸನಬದ್ಧ ಸಂಸ್ಥೆಗಳು. ಈ ಸ್ತಂಭಗಳು ವಿದ್ಯಾರ್ಥಿಗಳ ಶ್ರೇಷ್ಠತೆ, ಪ್ರಗತಿ ಮತ್ತು ಯೋಗಕ್ಷೇಮಕ್ಕಾಗಿ ನಿಂತಿವೆ. ಆದ್ದರಿಂದ, ಇವರು ಸಂಸ್ಥೆಯನ್ನು ಬಲಿಷ್ಠವಾಗಿ ನಿರ್ಮಿಸುವಲ್ಲಿ ಪ್ರಮುಖ ಜವಾಬ್ದಾರಿ ಹೊಂದಿದ್ದಾರೆ’ ಎಂದರು.

ಪ್ರೊ.ಬಟ್ಟು ಸತ್ಯನಾರಾಯಣ ಮಾತನಾಡಿ, ‘ಈ ಕಾರ್ಯಕ್ರಮವು ನಾನು ಮಾಡಿದ ಕೆಲಸ ಮತ್ತು ಭವಿಷ್ಯದಲ್ಲಿ ಏನು ಮಾಡಬೇಕು ಎಂಬುದರ ಕುರಿತು ಒಳನೋಟ ನೀಡಿದೆ. ಎಲ್ಲಾ ಬೋಧಕ ಮತ್ತು ಬೋಧಕೇತರರಿಗೆ ಅಗತ್ಯ ಸೌಲಭ್ಯ ನೀಡಲಾಗುವುದು. ನಿಮ್ಮ ಕರ್ತವ್ಯ ಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು. ನಿಮ್ಮ ಆಯಾ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡ ಬೇಕು ಎಂಬುದು ವಿಶ್ವವಿದ್ಯಾಲಯವು ನಿರೀಕ್ಷಿಸುತ್ತದೆ’ ಎಂದು ಹೇಳಿದರು. ಕರ್ನಾಟಕ ಕೇಂದ್ರೀಯ ವಿಶ್ವ ವಿದ್ಯಾಲಯದ ಕುಲಸಚಿವ ಪ್ರೊ.ಬಸವರಾಜ ಪಿ.ಡೋಣೂರ, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.