ADVERTISEMENT

ರವಿಕುಮಾರ್ ಹೇಳಿಕೆಗೆ ಖಂಡನೆ

​ಪ್ರಜಾವಾಣಿ ವಾರ್ತೆ
Published 3 ಜುಲೈ 2025, 15:43 IST
Last Updated 3 ಜುಲೈ 2025, 15:43 IST
ರೇಣುಕಾ ಸಿಂಗೆ
ರೇಣುಕಾ ಸಿಂಗೆ   

ಕಲಬುರಗಿ: ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಎನ್. ರವಿಕುಮಾರ್ ನಾಲಿಗೆ ಹರಿಬಿಟ್ಟು ತನ್ನೊಳಗಿನ ಕೊಳಕು ಮನಸ್ಥಿತಿಯನ್ನು ಹೊರಹಾಕಿದ್ದಾರೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೇಣುಕಾ ಸಿಂಗೆ ಟೀಕಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಮಾತು ಆಡಿದರೆ ಹೋಯಿತು, ಮುತ್ತು ಒಡೆದರೆ ಹೋಯಿತು ಎಂಬ ನಾಣ್ಣುಡಿಯಂತೆ ಶಾಲಿನಿ ಅವರ ವಿರುದ್ಧ ನೀವು ಆಡಿರುವ ಮಾತು ಇಡೀ ಸ್ತ್ರೀ ಕುಲಕ್ಕೆ ಮಾಡಿದ ಅಪಮಾನವಾಗಿರುತ್ತದೆ. ರವಿಕುಮಾರ್ ಹಿಂದೆಯೂ ಕಲಬುರಗಿ ಜಿಲ್ಲಾಧಿಕಾರಿಗಳನ್ನು ಪಾಕಿಸ್ತಾನದಿಂದ ಬಂದಿದ್ದಾರೆ ಎಂದು ಅವಮಾನಿಸುವ ಮೂಲಕ ದೇಶದ್ರೋಹಿ ಹೇಳಿಕೆಯನ್ನು ನೀಡಿದ್ದರು. ಜನಪ್ರತಿನಿಧಿಗಳು ಸಾರ್ವಜನಿಕ ಜೀವನದಲ್ಲಿ ಯಾವ ರೀತಿ ಭಾಷಾಪ್ರಯೋಗ ಮಾಡಬೇಕೆಂಬ ಅರಿವಿಲ್ಲದೆ, ಬಾಯಿಗೆ ಬಂದಂತೆ ನಾಲಿಗೆ ಹರಿಬಿಡುವುದು ಬಿಜೆಪಿಗರ ಹೊಲಸುತನವನ್ನು ಎತ್ತಿ ತೋರುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಅವರ ಪಕ್ಷಕ್ಕೆ ಕಿಂಚಿತ್ತಾದರೂ ಮಾನ–ಮರ್ಯಾದೆ ಉಳಿದಿದ್ದರೆ, ಕೂಡಲೇ ರವಿಕುಮಾರ್ ವಿರುದ್ಧ ಶಿಸ್ತು ಕ್ರಮ ಕೈಗೊಂಡು ಪಕ್ಷದಿಂದ ಹೊರಹಾಕಬೇಕು. ಮಹಿಳೆಯರ ಬಗ್ಗೆ ಕಿಂಚಿತ್ತೂ ಗೌರವ ಕೊಡದ ರವಿಕುಮಾರ್ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಿನ ಮಹಿಳೆಯರಲ್ಲಿ ಕ್ಷಮೆ ಯಾಚಿಸಬೇಕು’ ಎಂದು ಒತ್ತಾಯಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.