ADVERTISEMENT

ತಾ.ಪಂ, ಜಿ.ಪಂ ಕ್ಷೇತ್ರಗಳ ವಿಂಗಡಣೆಯಲ್ಲಿ ಬಿಜೆಪಿ ರಾಜಕೀಯ; ಕಾಂಗ್ರೆಸ್ ಟೀಕೆ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2021, 12:54 IST
Last Updated 5 ಏಪ್ರಿಲ್ 2021, 12:54 IST
ಭೀಮಣ್ಣ ಸಾಲಿ
ಭೀಮಣ್ಣ ಸಾಲಿ   

ಚಿತ್ತಾಪುರ: ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್ ವಿಂಗಡಣೆ ಮಾಡಿರುವ ರಾಜ್ಯ ಚುನಾವಣೆ ಆಯೋಗವು ಅವೈಜ್ಞಾನಿಕ ಕ್ರಮ ಅನುಸರಿಸಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಪಕ್ಷದ ಕಚೇರಿಯಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳನ್ನು ಬೇರೆ ಬೇರೆ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ವ್ಯಾಪ್ತಿಗೆ ಸೇರ್ಪಡೆ ಮಾಡುವ ಮೂಲಕ ಸಾರ್ವಜನಿಕರಿಗೆ ತೊಂದರೆ ಆಗುವಂತೆ ಮಾಡಲಾಗಿದೆ. ಮಾಜಿ ಶಾಸಕ ವಿಶ್ವನಾಥ ಪಾಟೀಲ್ ಹೆಬ್ಬಾಳ ಮತ್ತು ಸಂಸದ ಡಾ.ಉಮೇಶ ಜಾಧವ ಅವರು ಮತಬ್ಯಾಂಕ್ ರಾಜಕೀಯ ಮಾಡಿದ್ದಾರೆ ಎಂದು ಅವರು ಆರೋಪಿಸಿದರು.

ಗುಂಡಗುರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಧನಕಲ್, ಇವಣಿ ಪಂಚಾಯಿತಿ ವ್ಯಾಪ್ತಿಯ ತೊನಸನಹಳ್ಳಿ(ಟಿ) ಗ್ರಾಮಗಳನ್ನು ಕಾಳಗಿ ತಾಲ್ಲೂಕಿಗೆ ಸೇರ್ಪಡೆ ಮಾಡಿರುವುದು ಬಿಜೆಪಿ ಕುತಂತ್ರ ರಾಜಕಾರಣಕ್ಕೆ ಸಾಕ್ಷಿ ಎಂದು ತಿಳಿಸಿದರು.

ADVERTISEMENT

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ರಮೇಶ ಮರಗೋಳ ಅವರು ಮಾತನಾಡಿ, ದಂಡೋತಿ ಜಿಲ್ಲಾ ಪಂಚಾಯಿತಿ ಕ್ಷೇತ್ರವನ್ನು ಅವೈಜ್ಞಾನಿಕವಾಗಿ ರಚಿಸಲಾಗಿದೆ. ಇವಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊನಸನಹಳ್ಳಿ(ಟಿ) ಗ್ರಾಮ ಹಾಗೂ ಮೊಗಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಟಗಾ ಗ್ರಾಮವನ್ನು ಕೈಬಿಟ್ಟಿರುವುದು ಸಂಪೂರ್ಣ ಅವೈಜ್ಞಾನಿಕ ಎಂದು ಟೀಕಿಸಿದರು.

ಜಿಲ್ಲಾ ಪಂಚಾಯಿತಿ ವಿರೋಧ ಪಕ್ಷದ ನಾಯಕ ಶಿವಾನಂದ ಪಾಟೀಲ, ಮುಖಂಡರಾದ ಮುಖಂಡರಾದ ವೀರಣ್ಣಗೌಡ ಪರಸರೆಡ್ಡಿ, ಜಿಲ್ಲಾ ಪಂಚಾಯಿತಿ ಸದಸ್ಯ ಶಿವರುದ್ರ ಭೀಣಿ, ಪುರಸಭೆ ಅಧ್ಯಕ್ಷ ಚಂದ್ರಶೇಖರ ಕಾಶಿ, ಮುಖಂಡ ಸೂರ್ಯಕಾಂತ ಪೂಜಾರಿ, ಮುಕ್ತಾರ್ ಪಟೇಲ್, ನಾಗಯ್ಯಾ ಗುತ್ತೆದಾರ್, ಶಿವಾಜಿ ಕಾಶಿ ಉಪಸ್ಥಿತರಿದ್ದರು.

ನಳೀನಕುಮಾರ ಕಟೀಲ್ ಕ್ಷಮೆಗೆ ಆಗ್ರಹ

ಚಿತ್ತಾಪುರ: ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಕುರಿತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನಕುಮಾರ ಕಟೀಲ್ ‘ವಿಷಕಾರಿ ಖರ್ಗೆ’ ಅಂತ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಕೂಡಲೇ ಕಟೀಲ್ ಅವರು ಬಹಿರಂಗ ಕ್ಷಮೆ ಕೋರಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಶಿವಾನಂದ ಪಾಟೀಲ್, ಶಿವರುದ್ರ ಭೀಣಿ, ಮುಖಂಡ ಮುಕ್ತಾರ್ ಪಟೇಲ್ ಆಗ್ರಹಿಸಿದ್ದಾರೆ.

ಎರಡು ವರ್ಷದಲ್ಲಿ ಬಿಜೆಪಿ ಸಂಸದ ಡಾ.ಉಮೇಶ ಜಾಧವ ಅವರು ಜಿಲ್ಲೆಗೆ ಮಾಡಿರುವ ಅಭಿವೃದ್ಧಿ, ತಂದಿರುವ ಯೋಜನೆಗಳ ಕುರಿತು ಕಟೀಲ್ ಜಿಲ್ಲೆಯ ಜನರಿಗೆ ಮಾಹಿತಿ ನೀಡಬೇಕು. ಇರುವ ಸೌಲಭ್ಯ, ಯೋಜನೆ ಕಸಿದುಕೊಳ್ಳುವ ಬಿಜೆಪಿ ಸರ್ಕಾರಕ್ಕೆ ಖರ್ಗೆ ಅವರ ಕುರಿತು ಮಾತನಾಡುವ ಯಾವ ನೈತಿಕತೆಯೂ ಇಲ್ಲ. ಯೋಜನೆಗಳು ಕೈತಪ್ಪಿ ಹೋಗುತ್ತಿದ್ದರೂ ಬಾಯಿ ಮುಚ್ಚಿಕೊಂಡಿರುವ ಬಿಜೆಪಿ ಶಾಸಕರು, ಮುಖಂಡರು ಜಿಲ್ಲೆಯ ಜನತೆಗೆ ಮಾಡುತ್ತಿರುವ ಅನ್ಯಾಯ ಏನೆಂದು ಕಟೀಲ್ ಅರಿತುಕೊಂಡರೆ ಒಳಿತು ಎಂದು ಅವರು ತಿರುಗೇಟು ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.