ಕಲಬುರಗಿ: ಜಾರಿ ನಿರ್ದೇಶನಾಲಯವು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸತತ ಎಂಟು ಗಂಟೆ ವಿಚಾರಣೆ ನಡೆಸಿದ ಕ್ರಮವನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ ಖಂಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಧಿವೇಶನ ನಡೆಯುತ್ತಿರುವಾಗ ಖರ್ಗೆ ಅವರನ್ನು ಇಡಿ ವಿಚಾರಣೆಗೆ ಹಾಜರಾಗಬೇಕೆಂದು ಸಮನ್ಸ್ ನೀಡಿರುವದು ಅಕ್ಷಮ್ಯ. ಸಂವಿಧಾನಬದ್ಧ ಸಂಸ್ಥೆಗಳಾದ ಇಡಿ, ಸಿಬಿಐ, ಐಟಿ ಇವುಗಳನ್ನು ಬಿಜೆಪಿ ಸರ್ಕಾರ ಬಳಸಿಕೊಂಡು ಪ್ರತಿಪಕ್ಷಗಳ ನಿಯಂತ್ರಿಸಲು ಬಳಸುತ್ತಿರುವದು ಪ್ರಜಾಪ್ರಭುತ್ವದ ವಿರೋಧಿ ನೀತಿಗೆ ಕನ್ನಡಿಯಾಗಿದೆ. ಬಿಜೆಪಿ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ವಿರೋಧ ಪಕ್ಷದ ಬಾಯಿ ಮುಚ್ಚಿಸಲು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಪ್ರಜಾಪ್ರಭುತ್ವದ ವಿರೋಧಿಯಾಗಿದೆ. ಭಾರತೀಯ ಪ್ರಜೆಗಳು ಪ್ರಜ್ಞಾವಂತರಾಗಿದ್ದು ಮುಂಬರುವ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಉತ್ತರ ನೀಡಲಿದ್ದಾರೆ’ ಎಂದಿದ್ದಾರೆ.
ಖರ್ಗೆ ಅವರು ಕಳಂಕರಹಿತ ರಾಜಕಾರಣಿಯಾಗಿದ್ದು ಅಧಿವೇಶನದಲ್ಲಿ ಬಿಜೆಪಿ ಸರ್ಕಾರವನ್ನು ತಮ್ಮ ಮಾತಿನ ಮೂಲಕ ಕಟ್ಟಿ ಹಾಕುತ್ತಿದ್ದಾರೆ. ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸುತ್ತಿದ್ದಾರೆ. ಇದನ್ನು ಸಹಿಸದೇ ಪ್ರಧಾನಿ ನರೇಂದ್ರ ಮೋದಿಯವರು ವಾಮ ಮಾರ್ಗದ ಮೂಲಕವಾಗಿ ಇಡಿ ವಿಚಾರಣೆ ನೆಪದ ಮೂಲಕ ಖರ್ಗೆ ಅವರನ್ನು ನಿಯಂತ್ರಿಸಲು ಯತ್ನಿಸುತ್ತಿದ್ದಾರೆ. ಅವರ ಬೆನ್ನಿಗೆ ಕಾಂಗ್ರೆಸ್ ಪಕ್ಷದ ವರಿಷ್ಠ ನಾಯಕರು, ಮುಖಂಡರು, ಕೋಟ್ಯಂತರ ಕಾರ್ಯಕರ್ತರು, ಅಭಿಮಾನಿಗಳು ಮತ್ತು ಪ್ರಜಾಪ್ರಭುತ್ವದ ಮನಸ್ಸುಗಳು ಇದ್ದಾರೆ ಎಂದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.