ADVERTISEMENT

ನಿರ್ಬಂಧದ ನಡುವೆಯೂ ಕಲಬುರ್ಗಿ ಜಾತ್ರೆ: ವಿವರಣೆ ಕೇಳಿದ ಹೈಕೋರ್ಟ್

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2020, 16:13 IST
Last Updated 24 ಏಪ್ರಿಲ್ 2020, 16:13 IST
   

ಬೆಂಗಳೂರು: ಕಲಬುರ್ಗಿ ಜಿಲ್ಲೆಯ ಎರಡು ಕಡೆ ಲಾಕ್ ಡೌನ್ ಆದೇಶ ಉಲ್ಲಂಘಿಸಿ ಜಾತ್ರೆ ನಡೆಸಲಾಗಿದೆ ಎಂಬ ಆಕ್ಷೇಪಕ್ಕೆ ಸಂಬಂಧಿಸಿದಂತೆ ಜಾತ್ರೆ ಆಯೋಜಕರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಯಾಕೆ ಎಫ್‍ಐಆರ್ ದಾಖಲಿಸಿಕೊಂಡಿಲ್ಲ ಎಂಬ ಬಗ್ಗೆ ವಿವರಣೆ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ಈ ಕುರಿತು ವಕೀಲೆ ಗೀತಾ ಮಿಶ್ರಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲ ವಿಕ್ರಂ ಹುಯಿಲಗೋಳ ಅವರು ಲಿಖಿತ ವಾದ ಮಂಡಿಸಿದರು.

ADVERTISEMENT

'ಲಾಕ್‍ಡೌನ್ ಅವಧಿಯಲ್ಲಿ ಧಾರ್ಮಿಕ ಜಾತ್ರೆ, ಉತ್ಸವಗಳನ್ನು ತಡೆಯಲು ಜಿಲ್ಲಾಧಿಕಾರಿಗಳು ವಲಯದ ಮ್ಯಾಜಿಸ್ಟ್ರೇಟ್‍ ನೇಮಕ ಮಾಡಿ ಇದೇ 9ರಂದು ಆದೇಶ ಹೊರಡಿಸಿದ್ದಾರೆ' ಎಂದು ತಿಳಿಸಿದರು.

'ರೇವೂರು ಗ್ರಾಮದ ರಥೋತ್ಸವಕ್ಕೆ ಸಂಬಂಧಿಸಿದಂತೆ ಸ್ಥಳೀಯ ಗ್ರಾಮ ಲೆಕ್ಕಿಗರ ದೂರು ಆಧರಿಸಿ ಐಪಿಸಿಯ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ. ತನಿಖೆ ಪ್ರಗತಿಯಲ್ಲಿದೆ' ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, "ಜಾತ್ರೆ ಆಯೋಜಕರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಯಾಕೆ ಎಫ್‍ಐಆರ್ ದಾಖಲಿಸಿಕೊಂಡಿಲ್ಲ ಎಂಬ ಬಗ್ಗೆ ವಿವರಣೆ ನೀಡಿ" ಎಂದು ನಿರ್ದೇಶಿಸಿ ವಿಚಾರಣೆ ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.