ADVERTISEMENT

ವಿದ್ಯುಚ್ಛಕ್ತಿ ತಿದ್ದುಪಡಿ ಮಸೂದೆಗೆ ಸಿಪಿಎಂ ವಿರೋಧ

​ಪ್ರಜಾವಾಣಿ ವಾರ್ತೆ
Published 3 ಜೂನ್ 2020, 10:57 IST
Last Updated 3 ಜೂನ್ 2020, 10:57 IST

ಕಲಬುರ್ಗಿ: ವಿದ್ಯುತ್ ವಲಯವನ್ನು ಖಾಸಗೀಕರಣಗೊಳಿಸುವ ನಿಟ್ಟಿನಲ್ಲಿ ತರಲಾಗುತ್ತಿರುವ ವಿದ್ಯುಚ್ಛಕ್ತಿ ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ಭಾರತ ಕಮ್ಯುನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ–ಸಿಪಿಎಂ)ದ ಸದಸ್ಯರು ಇಲ್ಲಿನ ಜೆಸ್ಕಾಂ ಕೇಂದ್ರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಈ ತಿದ್ದುಪಡಿ ಕಾಯ್ದೆಯನ್ನು ದೇಶದಾದ್ಯಂತ ಜಾರಿಗೆ ತರಲು ಕೇಂದ್ರವು ಹುನ್ನಾರ ನಡೆಸಿದ್ದು, ಇದಕ್ಕೆ ಪೂರಕವಾಗಿ ರಾಜ್ಯ ಸರ್ಕಾರಗಳ ಮೇಲೆ ಒತ್ತಡ ಹೇರುತ್ತಿದೆ. ಈ ಮಸೂದೆಯನ್ನು ರಾಜ್ಯದಲ್ಲಿ ಜಾರಿಗೊಳಿಸಿದಲ್ಲಿ ರಾಜ್ಯದ ವಿದ್ಯುತ್‌ ಉತ್ಪಾದನೆ ಹಾಗೂ ಸರಬರಾಜು ಕಂಪನಿಗಳು ಹಾಗೂ ಅವುಗಳ ಕೋಟ್ಯಂತರ ಮೌಲ್ಯದ ಆಸ್ತಿಗಳು ಕಾರ್ಪೊರೇಟ್‌ ಕಂಪನಿಗಳ ಕೈವಶವಾಗಲಿವೆ. ರಾಜ್ಯದಲ್ಲಿ ಮಿಲಿಯಾಂತರ ಕೃಷಿ ಪಂಪ್‌ಸೆಟ್‌ಗಳು, ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಯೋಜನೆಗಳಿಂದ ಕೋಟ್ಯಂತರ ಬಡ ಕುಟುಂಬಗಳು ಹಾಗೂ ಮಿಲಿಯಾಂತರ ಸಣ್ಣ ಕೈಗಾರಿಕೆ ಕುಟುಂಬಗಳು ಉಚಿತ ಹಾಗೂ ಸಹಾಯಧನ ಆಧಾರದಲ್ಲಿ ವಿದ್ಯುತ್ ಪಡೆಯುತ್ತಿವೆ. ತಿದ್ದುಪಡಿ ಮಸೂದೆ ಜಾರಿಗೆ ಬಂದರೆ ಈ ಎಲ್ಲ ಸೌಲಭ್ಯಗಳನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಕೃಷಿ ಹಾಗೂ ಕೈಗಾರಿಕಾ ರಂಗದ ಅಭಿವೃದ್ಧಿ ದೃಷ್ಟಿಯಿಂದ ಮತ್ತು ಕಾರ್ಪೊರೇಟ್‌ ಕಂಪನಿಗಳ ಲೂಟಿಯ ದಾಳಿಯಿಂದ ಸಂರಕ್ಷಿಸಲು ಇದನ್ನು ಜಾರಿಗೊಳಿಸಬಾರದು ಎಂದು ಒತ್ತಾಯಿಸಿದರು.

ADVERTISEMENT

ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಶರಣಬಸಪ್ಪ ಮಮಶೆಟ್ಟಿ, ಮುಖಂಡರಾದ ಭೀಮಶೆಟ್ಟಿ ಯಂಪಳ್ಳಿ, ಗುರುನಂದೇಶ ಕೋಣಿನ, ಮೇಘರಾಜ ಕಠಾರೆ, ಅಲ್ತಾಫ್ ಹುಸೇನ್ ಇನಾಮದಾರ, ಜಾವೇದ್ ಹುಸೇನ್ ಮುಗಳಿಕರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.