ADVERTISEMENT

ಮಾದಕ ವಸ್ತುಗಳಿಂದ ಹಲವು ಸಮಸ್ಯೆ

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2019, 6:42 IST
Last Updated 26 ಆಗಸ್ಟ್ 2019, 6:42 IST
ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಸಮಾಜ ಕಾರ್ಯ ವಿಭಾಗದಲ್ಲಿ ನಡೆದ ಕಾರ್ಯಾಗಾರವನ್ನು ಕುಲಪತಿ ಪ್ರೊ.ಎಚ್‌.ಎಂ.ಮಹೇಶ್ವರಯ್ಯ ಉದ್ಘಾಟಿಸಿದರು
ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಸಮಾಜ ಕಾರ್ಯ ವಿಭಾಗದಲ್ಲಿ ನಡೆದ ಕಾರ್ಯಾಗಾರವನ್ನು ಕುಲಪತಿ ಪ್ರೊ.ಎಚ್‌.ಎಂ.ಮಹೇಶ್ವರಯ್ಯ ಉದ್ಘಾಟಿಸಿದರು   

ಕಲಬುರ್ಗಿ:ಮಾದಕ ವಸ್ತುಗಳ ದುರ್ಬಳಕೆಯು ದಿನದಿಂದ ದಿನಕ್ಕೆ ಯುವಕರಲ್ಲಿ ಏರಿಕೆ ಕಂಡುಬರುತ್ತಿದ್ದು, ಇದರಿಂದಾಗಿ ಸಮಾಜದಲ್ಲಿ ಹಲವಾರು ಹೊಸ ಹೊಸ ಸಮಸ್ಯೆಗಳು ಉದ್ಭವಿಸುತ್ತಿವೆ ಎಂದು ಇಲ್ಲಿನ ಕಡಗಂಚಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಚ್‌.ಎಂ.ಮಹೇಶ್ವರಯ್ಯ ಕಳವಳ ವ್ಯಕ್ತಪಡಿಸಿದರು.

ವಿಶ್ವವಿದ್ಯಾಲಯದ ಸಮಾಜ ಕಾರ್ಯ ವಿಭಾಗದಲ್ಲಿ ಶನಿವಾರ ಆಯೋಜಿಸಿದ್ದ, ಮಾದಕ ವಸ್ತುಗಳ ದುರ್ಬಳಕೆ ತಡೆಗಟ್ಟುವಲ್ಲಿ ಸಮಾಜ ಕಾರ್ಯ ವಿದ್ಯಾರ್ಥಿಗಳ ಸಾಮಾರ್ಥ್ಯವನ್ನು ಅಭಿವೃದ್ಧಿಗೊಳಿಸುವ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಶಿಕ್ಷಣ ಸಂಸ್ಥೆಯಲ್ಲಿ ಯುವಕರು ಮಾದಕ ವಸ್ತುಗಳ ದುರ್ಬಳಕೆಗೆ ಬಲಿಯಾಗುತ್ತಿದ್ದಾರೆ. ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹೆಚ್ಚಾಗಿ ಶಿಕ್ಷಣ ಸಂಸ್ಥೆ ಮತ್ತು ಗ್ರಾಮೀಣ ಸಮುದಾಯದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸಮುದಾಯದ ಜನರಿಗೆ ಜಾಗೃತಿ ಮೂಡಿಸಬೇಕು’ ಎಂದರು.

ADVERTISEMENT

ಕರ್ನಾಟಕ ರಾಜ್ಯ ಆರ್ಥಿಕ ನಿಗಮದ ಉಪ ವ್ಯವಸ್ಥಾಪಕ ಡಾ. ಚಂದ್ರಕಾಂತ ಚಂದಾಪುರ ಮಾತನಾಡಿ, ‘ಮಾದಕ ವಸ್ತುಗಳು ಇಂದಿನ ಯುಗದಲ್ಲಿ ಹೇಗೆ ಯುವಕರನ್ನು ದುರ್ಬಲರನ್ನಾಗಿಸುತ್ತದೆ ಹಾಗೂ ಮಾದಕ ವ್ಯಸನಕ್ಕೆ ಕಾರಣಗಳು, ವ್ಯಸನದ ಗುಣಲಕ್ಷಣಗಳು ಮತ್ತು ತಡೆಗಟ್ಟುವ ಕ್ರಮಗಳ ಕುರಿತು ಮಾತನಾಡಿದರು.

ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥ ಪ್ರೊ.ಚನ್ನವೀರ ಆರ್.ಎಂ. ಅವರು ಮಾದಕ ವಸ್ತು ಎಂಬ ಸಾಮಾಜಿಕ ಪಿಡುಗನ್ನು ತಡೆಗಟ್ಟುವಲ್ಲಿ ಸಮಾಜ ಕಾರ್ಯ ವಿದ್ಯಾರ್ಥಿಗಳ ಪಾತ್ರದ ಕುರಿತು ಮಾತನಾಡಿದರು. ಸಂಯೋಜಕ ಡಾ. ಲಕ್ಷ್ಮಣ. ಜಿ. ಕಾರ್ಯಾಗಾರದ ಉದ್ದೇಶ ಹಾಗೂ ಇದರಿಂದ ಸಮಾಜಕ್ಕೆ ಆಗುವ ಒಳಿತುಗಳ ಕುರಿತು ಮಾಹಿತಿ ನೀಡಿದರು.

ಮನೋವೈದ್ಯಕೀಯ ಸಮಾಜ ಕಾರ್ಯಕರ್ತ ಸುಧೀರ್ ಬಾಬು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.