ADVERTISEMENT

ಹಲ್ಲೆ ಪ್ರಕರಣ: ಮೂರು ವರ್ಷ ಕಠಿಣ ಶಿಕ್ಷೆ, ದಂಡ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2021, 4:07 IST
Last Updated 16 ಡಿಸೆಂಬರ್ 2021, 4:07 IST

ಕಲಬುರಗಿ: ಜೇವರ್ಗಿ ಠಾಣೆ ವ್ಯಾಪ್ತಿಯ ಮಂದರವಾಡ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಸಾಬೀತಾಗಿದ್ದರಿಂದ ಬಸವರಾಜ ದಿವಟಗಿ ಎಂಬಾತನಿಗೆ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ನೀಡಿದೆ.

2019ರ ಜುಲೈ 19ರಂದು ಗ್ರಾಮದ ಯಲ್ಲಮ್ಮ ದೇವಸ್ಥಾನದ ಬಳಿ ನಾಗರಾಜ ಮತ್ತು ಇತರರು ಆಟವಾಡುತ್ತ ಕುಳಿತಿದ್ದರು. ಈ ಸಂದರ್ಭದಲ್ಲಿ ಅಲ್ಲಿ ಬಂದ ಬಸವರಾಜ ನಾಗರಾಜ ಮಣಿಗೇರಿ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಡಲಿಯಿಂದ ಹಲ್ಲೆ ನಡೆಸಿದ್ದ. ಈ ಸಂಬಂಧ ಆತನ ವಿರುದ್ಧ ಜೇವರ್ಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಪಿಎಸ್‌ಐ ಶಿವಶಂಕರ ಸಾಹು ಅವರು ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು.

ADVERTISEMENT

ಪ್ರಕರಣ ವಿಚಾರಣೆ ನಡೆಸಿದ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಜಗದೀಶ್ ವಿ.ಎನ್., ಅವರು ಅಪರಾಧಿಗೆ ಮೂರು ವರ್ಷ ಕಠಿಣ ಶಿಕ್ಷೆ ಹಾಗೂ ₹ 7 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ. ಗಾಯಾಳುವಾಗಿದ್ದ ನಾಗರಾಜ ಅವರಿಗೆ ₹ 5 ಸಾವಿರ ಪರಿಹಾರ ನೀಡಬೇಕು ಎಂದು ತಿಳಿಸಿದ್ದಾರೆ. ಸರ್ಕಾರದ ಪರವಾಗಿ ಮೂರನೇ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಗುರುಲಿಂಗಪ್ಪ ತೇಲಿ ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.