ADVERTISEMENT

ಹರ್ ಘರ್ ತಿರಂಗಾ: ಪಾಲಿಕೆಯಿಂದ ಸೈಕ್ಲೋಥಾನ್

ನೂರಾರು ಸೈಕ್ಸಿಸ್ಟ್‌ಗಳು ಭಾಗಿ; ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಚಾಲನೆ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2022, 14:58 IST
Last Updated 8 ಆಗಸ್ಟ್ 2022, 14:58 IST
ಕಲಬುರಗಿ ಮಹಾನಗರ ಪಾಲಿಕೆಯಿಂದ ಆಯೋಜಿಸಿದ್ದ ಸೈಕ್ಲೋಥಾನ್‌ನಲ್ಲಿ ಭಾಗವಹಿಸಿದ್ದ ಸೈಕ್ಲಿಸ್ಟ್‌ಗಳು
ಕಲಬುರಗಿ ಮಹಾನಗರ ಪಾಲಿಕೆಯಿಂದ ಆಯೋಜಿಸಿದ್ದ ಸೈಕ್ಲೋಥಾನ್‌ನಲ್ಲಿ ಭಾಗವಹಿಸಿದ್ದ ಸೈಕ್ಲಿಸ್ಟ್‌ಗಳು   

ಕಲಬುರಗಿ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಮಹಾನಗರ ಪಾಲಿಕೆ, ಜಿಲ್ಲಾಡಳಿತ ಹಾಗೂ ಯುನೈಟೆಡ್ ಆಸ್ಪತ್ರೆಯ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಸೈಕ್ಲೋಥಾನ್‌ನಲ್ಲಿ ನೂರಾರು ಸೈಕ್ಲಿಸ್ಟ್‌ಗಳು ಭಾಗವಹಿಸಿದ್ದರು.

ನಗರದ ಜಗತ್ ವೃತ್ತದಿಂದ ಆರಂಭವಾದ ಮ್ಯಾರಾಥಾನ್‍ಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ಜಗತ್ ವೃತ್ತದಿಂದ ಆರಂಭವಾಗಿ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತ, ಕೋರ್ಟ್ ರಸ್ತೆ, ಆನಂದ ಹೋಟೆಲ್, ಗೋವಾ ಹೋಟೆಲ್ ಮಾರ್ಗವಾಗಿ ಮಹಾನಗರ ಪಾಲಿಕೆಗೆ ಬಂದು ಮುಕ್ತಾಯಗೊಂಡಿತು.

ADVERTISEMENT

ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಮಾತನಾಡಿ, ‘ದೇಶ ಸ್ವಾತಂತ್ರ್ಯಗೊಂಡು 75 ವರ್ಷಗಳನ್ನು ಕಳೆದು ಅಮೃತ ಮಹೋತ್ಸವ ಆಚರಿಸುತ್ತಿರುವ ಪ್ರಯುಕ್ತ ಸೈಕಲ್ ಮ್ಯಾರಾಥಾನ್ ಆಯೋಜಿಸಲಾಗಿದೆ. ಅರೋಗ್ಯದ ಕಾಳಜಿಗೆ ಸೈಕ್ಲಿಂಗ್ ಅವಶ್ಯಕವಾಗಿದೆ. ಯುವಕರು ಸೈಕಲ್ ಓಡಿಸಲು ಪ್ರೇರಣೆಗಾಗಿ ಈ ಜಾಥಾ ಆಯೋಜಿಸಲಾಗಿದೆ’ ಎಂದರು.

ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಭುವನೇಶ್ ಪಾಟೀಲ ಮಾತನಾಡಿ, ಜನರಲ್ಲಿ ದೇಶಭಕ್ತಿಯ ಅರಿವು ಮೂಡಿಸುವ ನಿಟ್ಟಿನಲ್ಲಿ ಸೈಕ್ಲೋಥಾನ್ ಸಹಾಯಕವಾಗಲಿದೆ ಎಂದು ಹೇಳಿದರು.

ಮ್ಯಾರಾಥಾನ್‍ನಲ್ಲಿ ಕಲಬುರಗಿ ಸೈಕ್ಲಿಸ್ಟ್ ಕ್ಲಬ್ ಸದಸ್ಯರು, ಶರಣಬಸವ ವಿಶ್ವವಿದ್ಯಾಲಯ, ಯುನೈಟೆಡ್ ಆಸ್ಪತ್ರೆ ಸಿಬ್ಬಂದಿ ಹಾಗೂ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿದರು.

ವಿಧಾನ ಪರಿಷತ್ ಸದಸ್ಯರಾದ ಬಿ.ಜಿ ಪಾಟೀಲ, ಶಶೀಲ್ ಜಿ. ನಮೋಶಿ, ಕ್ರೆಡೆಲ್ ಅಧ್ಯಕ್ಷ ಚಂದು ಪಾಟೀಲ, ಜಿಲ್ಲಾ ಪಂಚಾಯಿತಿ ಸಿಇಒ ಡಾ. ಗಿರೀಶ್ ಡಿ. ಬದೋಲೆ, ಸಾರ್ವಜನಿಕ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತೆ ಗರಿಮಾ ಪನ್ವಾರ್, ಡಿಸಿಪಿ ಅಡ್ಡೂರು ಶ್ರೀನಿವಾಸಲು, ಉಪವಿಭಾಗಾಧಿಕಾರಿ ಮೋನಾ ರೋತ್, ಕಲಬುರಗಿ ಸೈಕ್ಲಿಸ್ಟ್ ಕ್ಲಬ್ ಅಧ್ಯಕ್ಷ ಈರಣ್ಣಾ ಶೆಟಕಾರ, ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ಶಹರ ಘಟಕದ ಅಧ್ಯಕ್ಷ ಸಿದ್ದಾಜಿ ಪಾಟೀಲ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.