ಕಲಬುರಗಿ: ‘ಹದಿಹರೆಯದ ವಯಸ್ಸಿನ ಮಕ್ಕಳು ಇತ್ತೀಚೆಗೆ ಸಣ್ಣ–ಪುಟ್ಟ ವಿಷಯಗಳಿಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ನಿಜಕ್ಕೂ ದುರದೃಷ್ಟಕರ. ಮಕ್ಕಳಲ್ಲಿ ಮಾನಸಿಕ ಖಿನ್ನತೆ ಹೋಗಲಾಡಿಸಲು ಶಿಕ್ಷಣ ಸಂಸ್ಥೆಗಳು ಮಾನಸಿಕ ತಜ್ಞರ ಸಹಾಯ ಪಡೆದು ಮುಂದಿನ ಒಂದು ತಿಂಗಳಲ್ಲಿ ಆಪ್ತ ಸಮಾಲೋಚನೆ ಅಭಿಯಾನ ಹಮ್ಮಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಹೇಳಿದರು.
ತಮ್ಮ ಕಚೇರಿಯಲ್ಲಿ ಸೋಮವಾರ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.
‘ವಿದ್ಯಾರ್ಥಿಗಳ ಮಾನಸಿಕ ಮತ್ತು ದೈಹಿಕ ಯೋಗಕ್ಷೇಮ ಖಾತ್ರಿಪಡಿಸುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ್ ಇತ್ತೀಚೆಗೆ 15 ಅಂಶಗಳ ಮಾರ್ಗಸೂಚಿ ಹೊರಡಿಸಿದೆ. ಅದರಂತೆ ಪ್ರತಿ ಶಾಲೆ, ವಸತಿನಿಲಯ, ವಸತಿ ಶಾಲೆ, ಕಾಲೇಜುಗಳಲ್ಲಿ ಮಕ್ಕಳ ಮಾನಸಿಕ ಒತ್ತಡದಿಂದ ಹೊರಬರಲು ವಿನೂತನ ಚಟುವಟಿಕೆಗಳೊಂದಿಗೆ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು’ ಎಂದರು.
‘ಶಾಲೆ-ಕಾಲೇಜುಗಳಲ್ಲಿ ರ್ಯಾಗಿಂಗ್ ಆಗದಂತೆ ಎಚ್ಚರ ವಹಿಸಬೇಕು. ಜಾತಿ, ಧರ್ಮ, ಲಿಂಗದ ಆಧಾರದ ಮೇಲೆ ಮಕ್ಕಳು ಅಪಹಾಸ್ಯವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಶಾಲೆ ಮತ್ತು ಶಿಕ್ಷಕರದ್ದಾಗಿದೆ. ಪ್ರತಿ ಶಾಲೆಯಲ್ಲಿ ಒಬ್ಬ ಮನಃಶಾಸ್ತ್ರಜ್ಞ ಇಲ್ಲವೇ ಸಾಮಾಜಿಕ ಕಾರ್ಯಕರ್ತರನ್ನು ಸಲಹೆಗಾರರನ್ನಾಗಿ ನೇಮಿಸಿಕೊಳ್ಳಬೇಕು. ಶಾಲಾ ಹಂತದಲ್ಲೇ ಮಕ್ಕಳಿಗೆ ಉತ್ತಮ ಪರಿಸರ ಒದಗಿಸುವ ಜೊತೆಗೆ ಮಕ್ಕಳಲ್ಲಿನ ಕೀಳರಿಮೆ ಮನೋಭಾವ ಹೋಗಲಾಡಿಸಬೇಕು’ ಎಂದರು.
‘ಇತ್ತೀಚೆಗೆ ಪರೀಕ್ಷೆಯಲ್ಲಿ ಅಂಕ ಕಡಿಮೆ ಬಂದರೆ, ಶಾಲೆಯಲ್ಲಿ ಶಿಕ್ಷಕರು ಮತ್ತು ಮನೆಯಲ್ಲಿ ಪಾಲಕ-ಪೋಷಕರು ಬುದ್ಧಿವಾದ ಹೇಳಿದರೆ ಮಕ್ಕಳು ಅದನ್ನು ಕೇಳುವ ವ್ಯವಧಾನ, ಸಂಯಮ ಇಲ್ಲದೆ ಜೀವನವನ್ನೇ ಕಳೆದುಕೊಳ್ಳುವ ಕೆಟ್ಟ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ಇದರಿಂದ ಅವರನ್ನು ಹೊರತಂದು ಅವರಲ್ಲಿ ಬೌದ್ಧಿಕ ಶಕ್ತಿ, ಸಾಮರ್ಥ್ಯ ಮತ್ತು ಆತ್ಮವಿಶ್ವಾಸ ಹೆಚ್ಚಿಸುವ ಅಗತ್ಯವಿದೆ. ಅಂಕದಿಂದಲೇ ಬದುಕಲ್ಲ ಎಂಬುದನ್ನು ಅವರಿಗೆ ಮನವರಿಕೆ ಮಾಡಿಕೊಡಬೇಕಿದೆ’ ಎಂದರು.
ಸಭೆಯಲ್ಲಿ ಡಿಡಿಪಿಐ ಸೂರ್ಯಕಾಂತ ಮದಾನೆ, ಡಿಎಚ್ಒ ಡಾ.ಶರಣಬಸಪ್ಪ ಕ್ಯಾತನಾಳ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೀತಿ ದೊಡ್ಡಮನಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸೋಮಶೇಖರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮುನಾವರ್ ದೌಲಾ ಸೇರಿದಂತೆ ಇತರೆ ಜಿಲ್ಲಾಮಟ್ಟದ ಅಧಿಕಾರಿಗಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.