ADVERTISEMENT

ದೂರದರ್ಶನ ಕೇಂದ್ರ ಸ್ಥಳಾಂತರ ಬೇಡ: ವೀರಭದ್ರ ಸಿಂಪಿ ಒತ್ತಾಯ

ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ವೀರಭದ್ರ ಸಿಂಪಿ ಒತ್ತಾಯ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2021, 11:11 IST
Last Updated 1 ಸೆಪ್ಟೆಂಬರ್ 2021, 11:11 IST
ವೀರಭದ್ರ ಸಿಂಪಿ
ವೀರಭದ್ರ ಸಿಂಪಿ   

ಕಲಬುರ್ಗಿ: ಯಾವುದೇ ಕಾರಣಕ್ಕೂ ಇಲ್ಲಿನ ದೂರದರ್ಶನ ಕೇಂದ್ರವನ್ನು ಬೇರೆ ಕಡೆ ಸ್ಥಳಾಂತರಿಸುವ ಯತ್ನವನ್ನು ಕೇಂದ್ರ ಸರ್ಕಾರ ಮಾಡಬಾರದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ವೀರಭದ್ರ ಸಿಂಪಿ ಒತ್ತಾಯಿಸಿದರು.‌

ನಗರದ ಕನ್ನಡ ಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರವು 1977ರಲ್ಲಿ ರಾಜ್ಯದಲ್ಲಿ ಮೊದಲ ಬಾರಿಗೆ ಕಲಬುರ್ಗಿಯಲ್ಲಿ ದೂರದರ್ಶನ ಕೇಂದ್ರವನ್ನು ಸ್ಥಾಪಿಸಿದೆ. ಅದು ಕಲ್ಯಾಣ ಕರ್ನಾಟಕ ಭಾಗದ ಧ್ವನಿಯಾಗಿ ಕಾರ್ಯನಿರ್ವಹಿಸಿದೆ. ಹೆಚ್ಚಿನ ಸಿಬ್ಬಂದಿ ನಿಯೋಜನೆ, ಪರಿಣಾಮಕಾರಿ ಕಾರ್ಯಕ್ರಮಗಳ ಪ್ರಸಾರ, ಜಾಹೀರಾತು ನೀಡುವ ಮೂಲಕ ದೂರದರ್ಶನ ಕೇಂದ್ರವನ್ನು ಸಶಕ್ತಗೊಳಿಸಬೇಕೆ ವಿನಾ ಅದನ್ನು ಮುಚ್ಚುವ ಕೆಲಸವನ್ನು ಮಾಡಬಾರದು ಎಂದು ಅವರು ಹೇಳಿದರು.

ಕಲ್ಯಾಣ ಕರ್ನಾಟಕದ ಜನರು ಮುಗ್ಧರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇದನ್ನೇ ದುರುಪಯೋಗ ಪಡಿಸಿಕೊಂಡು ಈ ಭಾಗಕ್ಕೆ ಬಂದಿರುವ ಯೋಜನೆಗಳನ್ನು ಹಿಂತೆಗೆದುಕೊಳ್ಳುತ್ತಿದ್ದು, ಈ ಭಾಗದ ಅಭಿವೃದ್ಧಿಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿವೆ ಎಂದು ಕಿಡಿಕಾರಿದ ಅವರು, ಕೂಡಲೇ ಎಲ್ಲ ಯೋಜನೆ, ಸೌಲಭ್ಯಗಳನ್ನು ವಾಪಸ್ ನೀಡಬೇಕು ಎಂದು ಆಗ್ರಹಿಸಿದರು.

ADVERTISEMENT

ಈಗಾಗಲೇ ದೂರದರ್ಶನ ಕೇಂದ್ರವನ್ನು ಸ್ಥಳಾಂತರಿಸದಂತೆ ಕೇಂದ್ರ ಸರ್ಕಾರ ಮೇಲೆ ಒತ್ತಡ ಹೇರಬೇಕು ಎಂದು ಈ ಭಾಗದ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಲಾಗಿದೆ. ಒಂದು ವೇಳೆ ಸ್ಥಳಾಂತರಕ್ಕೆ ಮುಂದಾದರೆ ಈ ಭಾಗದ ಸಂಸದರ ಮನೆ ಎದುರು ಧರಣಿ ನಡೆಸಲಾಗುವುದು ಎಂದು ಅವರು ತಿಳಿಸಿದರು.

ಪ್ರಮುಖರಾದ ಸಿ.ಎಸ್.ಮಾಲಿಪಾಟೀಲ, ಲಿಂಗರಾಜ ಸಿರಗಾಪುರ, ಆನಂದ ನಂದೂರಕರ್, ದೌಲತರಾಯ ಮಾಲಿ ಪಾಟೀಲ, ಡಿ.ಎಂ.ನದಾಫ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.