ವಾಡಿ: ಬಲರಾಮ ಚೌಕ್ನಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಿಸುವುದು ಬೇಡ. ಬಡಕಾರ್ಮಿಕರು, ಬೀದಿ ವ್ಯಾಪಾರಿಗಳು ಹಾಗೂ ಶ್ರಮಿಕರು ಇರುವಂತಹ ಸ್ಥಳದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಿಸಬೇಕು ಎಂದು ಒತ್ತಾಯಿಸಿ ಪಟ್ಟಣದಲ್ಲಿ ಮಂಗಳವಾರ ಎಸ್ಯುಸಿಐ ಸಂಘಟನೆ ಸದಸ್ಯರು ಕಾರ್ಯದರ್ಶಿ ಆರ್.ಕೆ. ವೀರಭದ್ರಪ್ಪ ನೇತೃತ್ವದಲ್ಲಿ, ಪುರಸಭೆ ಅಧಿಕಾರಿಗೆ ಮನವಿ ಸಲ್ಲಿಸಿದರು.
ಇಂದಿರಾ ಕ್ಯಾಂಟೀನ್ ಕಟ್ಟಡವನ್ನು ಬಲರಾಮ ಚೌಕ್ನ ನೀರಿನ ಟ್ಯಾಂಕ್ನ ಬಳಿ ನಿರ್ಮಿಸಲು ಮುಂದಾಗಿರುವ ಕ್ರಮವನ್ನು ಸಂಘಟನೆ ಖಂಡಿಸುತ್ತದೆ. ಪಟ್ಟಣದ ಪ್ರಮುಖ ಸ್ಥಳದಲ್ಲಿ ಕ್ಯಾಂಟೀನ್ ನಿರ್ಮಿಸಬೇಕು ಎಂದು ಸಂಘಟನೆ ಸದಸ್ಯರು ಒತ್ತಾಯಿಸಿದರು.
ಪಟ್ಟಣಕ್ಕೆ ವ್ಯಾಪಾರ ವಹಿವಾಟಿಗಾಗಿ ಸುತ್ತಲಿನ 10 ಗ್ರಾಮಗಳಿಂದ ಜನರು ಬರುತ್ತಾರೆ. ಸಿಮೆಂಟ್ ಕಾರ್ಖಾನೆ ಕಾರ್ಮಿಕರು, ಲಾರಿ ಚಾಲಕರು ಹಾಗೂ ಕ್ಲೀನರ್ಸ್ ಅವರು ವಾರಗಟ್ಟಲೇ ತಂಗುತ್ತಾರೆ. ಕಾಲೇಜು ಹಾಗೂ ಉದ್ಯೋಗಕ್ಕಾಗಿ ವಿದ್ಯಾರ್ಥಿಗಳು ನಿತ್ಯ ಪಟ್ಟಣಕ್ಕೆ ಬರುತ್ತಾರೆ. ಬಡವರಿಗೆ ಕಡಿಮೆ ಹಣದಲ್ಲಿ ಹೊಟ್ಟೆ ತುಂಬಾ ಊಟ ಸಿಗುವ ದೃಷ್ಟಿಯಿಂದ ಈ ಯೋಜನೆ ಆರಂಭಿಸಲಾಗಿದೆ. ಯೋಜನೆ ಸರಿಯಾಗಿ ಸದ್ಬಳಕೆ ಆಗಬೇಕಾದರೆ ಕಾರ್ಮಿಕರು ತಂಗುವ ಸ್ಥಳದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಿಸಬೇಕು. ನೂರಾರು ಬಡವರು, ಕೂಲಿಕಾರ್ಮಿಕರ ಅನುಕೂಲಕ್ಕಾಗಿ ಒತ್ತಾಯಿಸುತ್ತಿದ್ದು, ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದರು.
ಸ್ಥಳೀಯ ಸಮಿತಿ ಸದಸ್ಯರಾದ ಶರಣು ಹೇರೂರ, ವೆಂಕಟೇಶ ದೇವದುರ್ಗ, ರಾಜು ಒಡೆಯರ, ಆನಂದ ಜಿನ್ನಕೇರಿ, ಚಂದ್ರು ಮಾಳಗಿ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.