ಕಲಬುರಗಿ: ‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿ ರಾಜ್ಯದ ಬಿಜೆಪಿ ಸಂಸದರು ಪ್ರಧಾನಿ ಮೇಲೆ ಒತ್ತಡ ಹಾಕಿ ರೈತರಿಗೆ ಬೆಳೆಹಾನಿ ಪರಿಹಾರ ನೀಡಲು ವಿಶೇಷ ಪ್ಯಾಕೇಜ್ ಘೋಷಣೆ ಮಾಡಿಸಬೇಕು ಎಂದು ಆಗ್ರಹಿಸಿ ಅ.8ರಂದು ಜಿಲ್ಲಾಧಿಕಾರಿ ಕಚೇರಿ ಎದುರು ರೈತರು, ಕೃಷಿ ಕೂಲಿಕಾರ್ಮಿಕರ ಒಂದು ದಿನದ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ’ ಎಂದು ಕರ್ನಾಟಕ ರಾಜ್ಯ ರೈತ ಕಾರ್ಮಿಕರ ಸೇವಾ ಸಂಘದ ಗೌರವ ಸಲಹೆಗಾರ ಶೌಕತ್ ಅಲಿ ಆಲೂರ ತಿಳಿಸಿದರು.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸತತ ಮಳೆ, ಪ್ರವಾಹದಿಂದಾಗಿ ರೈತರ ಬದುಕು ದುಸ್ತರವಾಗಿದೆ. ಜನ ಮನೆ ಕಳೆದುಕೊಂಡಿದ್ದಾರೆ. ಪಂಜಾಬ್ ಮತ್ತು ಇತರೆ ಕಡೆ ಪ್ರವಾಹ ಪ್ಯಾಕೇಜ್ ಘೋಷಣೆ ಮಾಡಿದ ಪ್ರಧಾನಿ ಅವರು ಕರ್ನಾಟಕಕ್ಕೆ ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ’ ಎಂದು ಆರೋಪಿಸಿದರು.
‘ಮುಖ್ಯಮಂತ್ರಿ ಅವರು ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಿ ಎನ್ಡಿಆರ್ಎಫ್ ಮಾರ್ಗಸೂಚಿ ದರದೊಂದಿಗೆ ಹೆಚ್ಚುವರಿ ಪರಿಹಾರ ಘೋಷಣೆ ಮಾಡಿದ್ದಾರೆ. ಆದರೆ, ಕೇಂದ್ರ ಸರ್ಕಾರ ಗಾಢ ನಿದ್ರೆಯಲ್ಲಿದೆ. ಕೇಂದ್ರ ಅಧ್ಯಯನ ತಂಡ ಪರಿಶೀಲನೆಗೆ ಬಂದಿಲ್ಲ. ಈ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಬಾಯಿ ಬಿಡುತ್ತಿಲ್ಲ’ ಎಂದು ದೂರಿದರು.
ಸಂಘದ ಅಧ್ಯಕ್ಷ ಚಂದು ಜಾಧವ ಮಾತನಾಡಿ, ‘ರೈತರ ಸಂಕಷ್ಟದ ಪರಿಸ್ಥಿತಿಯಲ್ಲೂ ಬಿಜೆಪಿ ನಾಯಕರು ರಾಜಕೀಯ ಮಾಡುತ್ತಿದ್ದಾರೆ. ರೈತರಿಗೆ ರಾಜ್ಯದೊಂದಿಗೆ ಕೇಂದ್ರದ ಪರಿಹಾರವೂ ಕೊಡಿಸುತ್ತೇವೆ ಎಂದು ಭರವಸೆ ನೀಡುತ್ತಿಲ್ಲ’ ಎಂದರು.
ಪ್ರಮುಖರಾದ ನಂದಕುಮಾರ ಮಾಲಿಪಾಟೀಲ, ಸುನೀಲ್ ಮಾರುತಿ ಮಾನಪಡೆ, ಅಂಬಾರಾಯ ಜವಳಗಾ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.