ಕಲಬುರ್ಗಿ: ಕೃಷಿ ಕಾಯ್ದೆಗಳ ತಿದ್ದುಪಡಿ ಹಿಂಪಡೆಯಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಹಮ್ಮಿಕೊಂಡ ಅನಿರ್ದಿಷ್ಟ ಧರಣಿಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹಾಗೂ ಜಿಲ್ಲೆಯ ಕಾಂಗ್ರೆಸ್ ನಾಯಕರು ಸೋಮವಾರ ಬೆಂಬಲ ನೀಡಿದರು.
ದೆಹಲಿಯ ಹೊರವಲಯದಲ್ಲಿ ನಡೆಯುತ್ತಿರುವ ರೈತರ ಹೋರಾಟ ಬೆಂಬಲಿಸಿ ಹಮ್ಮಿಕೊಂಡಿರುವ ಈ ಧರಣಿ ಸತ್ಯಾಗ್ರಹಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ. ಜ.28ರಿಂದ ಆರಂಭವಾಗಲಿರುವ ವಿಧಾನಸಭೆ ಅಧಿವೇಶನದಲ್ಲಿ ತೊಗರಿ ಬೆಳೆಗಾರರ ಸಮಸ್ಯೆ ಪ್ರಸ್ತಾಪಿಸುತ್ತೇನೆ’ ಎಂದು ಶಿವಕುಮಾರ್ ಹೇಳಿದರು.
ರೈತರು ಬೆಂಗಳೂರಿಗೆ ಬನ್ನಿ. ವಿರೋಧಿ ಪಕ್ಷದ ನಾಯಕ ಸಿದ್ದರಾಮಯ್ಯ ಅವರೂ ನಿಮ್ಮೊಂದಿಗೆ ಇರುತ್ತಾರೆ. ಸರ್ಕಾರದ ಮೇಲೆ ಒತ್ತಡ ಹೇರಲು ಚರ್ಚಿಸೋಣ. ರೈತ ವಿರೋಧಿ ಯಡಿಯೂರಪ್ಪ ಸರ್ಕಾರ ಕಿತ್ತೊಗೆಯುವವರೆಗೂ ಒಟ್ಟಾಗಿ ಹೋರಾಡೋಣ ಎಂದರು.
ರೈತ ಮುಖಂಡ ಸುನೀಲ ಮಾನಪಡೆ ಮಾತನಾಡಿ, ತೊಗರಿಗೆ ₹ 8750 ಬೆಂಬಲ ಬೆಲೆ ನೀಡಲು ರಾಜ್ಯ ಸರ್ಕಾರ ಹಿಂದೇಟು ಹಾಕುತ್ತಿದೆ. ಇದರಿಂದ ತೊಗರಿ ಬೆಳೆಗಾರರು ಬದುಕು ದುಸ್ತರವಾಗಿದೆ. ಸರ್ಕಾರದ ಮೇಲೆ ಒತ್ತಡ ತಂದು ರೈತರನ್ನು ಕಾಪಾಡಬೇಕು ಎಂದು ಮನವಿ ಮಾಡಿದರು.
ಕಾಂಗ್ರೆಸ್ ಮುಖಂಡರಾದ ಡಾ.ಶರಣಪ್ರಕಾಶ ಪಾಟೀಲ, ಶಾಸಕರಾದ ಅಜಯಸಿಂಗ್, ಮುಖಂಡ ಅಲ್ಲಮಪ್ರಭು ಪಾಟೀಲ, ತಿಪ್ಪಣ್ಣಪ್ಪ ಕಮಕನೂರ ಅವರೂ ಕೆಲಕಾಲ ಧರಣಿ ಕುಳಿತರು.
ಖಂಡರಾದ ಅಶೋಕ ಮ್ಯಾಗೇರಿ, ಸುಭಾಷ ಹೊಸಮನಿ, ಸಿದ್ದು ಹರವಾಳ, ಶಾಂತಪ್ಪ ಪಾಟೀಲ, ಪಾಂಡುರಂಗ ಮಾವಿನಕರ, ಸುಧಾಮ ಧನ್ನಿ, ಮಲ್ಲಣಗೌಡ ಬನ್ನೂರು, ಕಾಶಿನಾಥ ಬಂಡೆ, ಸಿದ್ಧಲಿಂಗ ಪಾಳ ಮೈಲಾರಿ ದೊಡ್ಮನಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.