ADVERTISEMENT

ಕೆಲಸಕ್ಕೆ ಕಳುಹಿಸದೇ ಮಕ್ಕಳಿಗೆ ಶಿಕ್ಷಣ ಕೊಡಿಸಿ: ಶ್ರೀನಿವಾಸ ನವಲೆ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2026, 4:58 IST
Last Updated 4 ಫೆಬ್ರುವರಿ 2026, 4:58 IST
ಕಲಬುರಗಿಯ ವೀರಮ್ಮ ಗಂಗಸಿರಿ ಮಹಿಳಾ ಪದವಿ ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ಜಿಲ್ಲಾ ಹಿರಿಯ ಸಿವಿಲ್‌ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಶ್ರೀನಿವಾಸ ನವಲೆ ಉದ್ಘಾಟಿಸಿದರು
ಕಲಬುರಗಿಯ ವೀರಮ್ಮ ಗಂಗಸಿರಿ ಮಹಿಳಾ ಪದವಿ ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕಾನೂನು ಅರಿವು ಕಾರ್ಯಕ್ರಮವನ್ನು ಜಿಲ್ಲಾ ಹಿರಿಯ ಸಿವಿಲ್‌ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಶ್ರೀನಿವಾಸ ನವಲೆ ಉದ್ಘಾಟಿಸಿದರು   

ಕಲಬುರಗಿ: ‘ಮಕ್ಕಳ ಬಾಲ್ಯವನ್ನು ಕಸಿದು, ಅವರ ಕನಸುಗಳನ್ನು ನುಚ್ಚುನೂರು ಮಾಡುವ ಕೆಲಸ ಬಾಲಕಾರ್ಮಿಕ ಪದ್ಧತಿಯಾಗಿದೆ. ಕೊಂಚ ಆರ್ಥಿಕ ಸಮಸ್ಯೆ ನೀಗಬಹುದು ಎಂದು ಪಾಲಕರು ಮಕ್ಕಳನ್ನು ಕೆಲಸಕ್ಕೆ ದೂಡಿದರೆ ಅವರ ಭವಿಷ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಮಕ್ಕಳಿಗೆ ಶಿಕ್ಷಣ ಕೊಡಿಸುವ ಕೆಲಸ ಪಾಲಕರು ಮಾಡಬೇಕು’ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ‍ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀನಿವಾಸ ನವಲೆ ಹೇಳಿದರು.

ಇಲ್ಲಿನ ವೀರಮ್ಮ ಗಂಗಸಿರಿ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ತಿದ್ದುಪಡಿ 2016ರ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಮಕ್ಕಳನ್ನು ದುಡಿಸಿಕೊಳ್ಳುವುದು ಕಾನೂನು ಪ್ರಕಾರ ಅಪರಾಧವಾಗಿದ್ದು, ಅಪರಾಧಿಗಳಿಗೆ 6 ತಿಂಗಳಿಂದ 2 ವರ್ಷಗಳಿಗೆ ಶಿಕ್ಷೆ ಹಾಗೂ ₹20 ಸಾವಿರದಿಂದ ₹50 ಸಾವಿರದವರೆಗೆ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ’ ಎಂದರು.

‘ಬಾಲಕಾರ್ಮಿಕ ಪದ್ಧತಿ ತಡೆಗೆ ವಿದ್ಯಾರ್ಥಿಗಳು ಕೈಜೋಡಿಸಬೇಕು. ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಮಕ್ಕಳನ್ನು ಇಲಾಖೆ ಅಧಿಕಾರಿಗಳು ಕರೆತಂದು ಶಾಲೆಗೆ ಕಳುಹಿಸುವ ಕೆಲಸ ಮಾಡುತ್ತಾರೆ. ಈ ಕಾರ್ಯಕ್ರಮ ಯಶಸ್ವಿಗೆ ಸರ್ಕಾರಗಳ ಯೋಜನೆಗಳು ಬೇಕು. ಇಲಾಖೆ ಅಧಿಕಾರಿಗಳ ಇಚ್ಛಾಶಕ್ತಿ ಹಾಗೂ ಸಾರ್ವಜನಿಕರ ಸಹಭಾಗಿತ್ವವೂ ಮುಖ್ಯವಾಗಿದೆ’ ಎಂದು ಹೇಳಿದರು.

ADVERTISEMENT

‘ಮಕ್ಕಳಿಗೆ ಶಿಕ್ಷಣ ಅತಿ ಮುಖ್ಯವಾಗಿದ್ದು, ಮನುಷ್ಯ ತಾನು ಅಭಿವೃದ್ಧಿ ಜೊತೆಗೆ ಸಮಾಜ ಅಭಿವೃದ್ಧಿಗೂ ನೆರವಾಗುತ್ತಾರೆ. ಬಾಲ ಕಾರ್ಮಿಕರಾಗಿಯೇ ಉಳಿದರೆ ಹೆಚ್ಚಿನ ಆದಾಯ, ಕೌಶಲ ಇರಲ್ಲ. ಜೀವನಪೂರ್ತಿ ಜೀವನ ಅಷ್ಟಕ್ಕೆ ಸೀಮಿತವಾಗಿರುತ್ತದೆ. ದೇಶದ ಆರ್ಥಿಕತೆಗೂ ಅಪಾಯಕಾರಿಯಾಗಿದೆ. ಇದರ ವಿರುದ್ಧ ಅಧಿಕಾರಿಗಳು ಸೇರಿ ಎಲ್ಲರೂ ಹೋರಾಡಬೇಕಾಗಿದೆ’ ಎಂದು ಹೇಳಿದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಶರಣಪ್ಪ ಆರ್‌. ಹಳಿಮನಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ವಿಶ್ವರಾಧ್ಯ ಇಜೇರಿ, ಅಧ್ಯಕ್ಷತೆ ವಹಿಸಿ ವಹಿಸಿದ್ದ ಕಲಬುರಗಿ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತ ಮೊಹಮ್ಮದ್‌ ಬಷೀರ್‌ ಅನ್ಸಾರಿ ಮಾತನಾಡಿದರು.

ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಹೇಶ ಮೇಘಣ್ಣವರ, ಕಾಲೇಜಿನ ಪ್ರಾಚಾರ್ಯ ಆರ್‌.ಬಿ. ಕೊಂಡಾ, ಉಪಪ್ರಾಚಾರ್ಯೆ ವೀಣಾ ಎಚ್‌., ಕಾನೂನು ಅಧಿಕಾರಿ ಭಾರತೀಶ ಶೀಲವಂತರ ಹಾಜರಿದ್ದರು.

ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ಸಂತೋಷ ಕುಲಕರ್ಣಿ ವಂದಿಸಿದರು. ಬಾಲ ಕಾರ್ಮಿಕರ ಪದ್ಧತಿ ವಿರೋಧಿಸುವ ಕುರಿತು ಹಿರಿಯ ಸಿವಿಲ್‌ ನ್ಯಾಯಾಧೀಶ ಶ್ರೀನಿವಾಸ ನವಲೆ ಪ್ರಮಾಣವಚನ ಬೋಧಿಸಿದರು.

ಬಾಲಕಾರ್ಮಿಕ ಪದ್ಧತಿಯಿಂದ ಹೊರಬಂದು ಐಟಿಐ ಶಿಕ್ಷಣ ಪಡೆಯುತ್ತಿರುವ ನಾಗಪ್ಪ ಎಂಬ ವಿದ್ಯಾರ್ಥಿಗೆ ಕಾರ್ಮಿಕ ಇಲಾಖೆ ವತಿಯಿಂದ ₹ 35,000 ಸಹಾಯಧನದ ಚೆಕ್‌ ವಿತರಣೆ ಮಾಡಲಾಯಿತು.

ಸಮಾಜದಲ್ಲಿ ಬಾಲ ಕಾರ್ಮಿಕ ಪದ್ಧತಿ ನಡೆಯದಂತೆ ಜನರಿಗೆ ಅರಿವು ಮೂಡಿಸುವ ಹಾಗೂ ಈ ಬಗ್ಗೆ ಪ್ರಕರಣ ಗಮನಕ್ಕೆ ಬಂದರೆ ಇಲಾಖೆಗೆ ಮಾಹಿತಿ ನೀಡಬೇಕು.
ಶಿವನಗೌಡ ಪಾಟೀಲ, ಉತ್ತರ ಉಪವಿಭಾಗದ ಎಸಿಪಿ
ಬಾಲ್ಯವಿವಾಹ ಬಾಲ ಕಾರ್ಮಿಕತೆ ಬಾಲ ಬಿಕ್ಷಾಟನೆ ಪ್ರಕರಣಗಳು ಕಂಡುಬಂದರೆ ಮಕ್ಕಳ ಸಹಾಯವಾಣಿ 1098ಗೆ ಮಾಹಿತಿ ನೀಡಬೇಕು.
ಮಂಜುಳಾ ಪಾಟೀಲ, ಮಕ್ಕಳ ಜಿಲ್ಲಾ ರಕ್ಷಣಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.