ADVERTISEMENT

ಉನ್ನತ ಶಿಕ್ಷಣದ ಖಾಸಗೀಕರಣಕ್ಕೆ ಕೇಂದ್ರ ಯತ್ನ: ಪ್ರೊ.ಸುರ್ಜಿತ್‌ ಮಜುಂದಾರ್ ಕಳವಳ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2019, 1:13 IST
Last Updated 9 ಸೆಪ್ಟೆಂಬರ್ 2019, 1:13 IST
ಪ್ರೊ.ಸುರ್ಜಿತ್‌ ಮಜುಮದಾರ್
ಪ್ರೊ.ಸುರ್ಜಿತ್‌ ಮಜುಮದಾರ್   

ಕಲಬುರ್ಗಿ: ‘ಕೇಂದ್ರ ಸರ್ಕಾರವು ಜಾರಿಗೊಳಿಸಲು ಉದ್ದೇಶಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿನ ಅಂಶಗಳು ಮೇಲ್ನೋಟಕ್ಕೆ ಸರ್ಕಾರಿ ಸ್ವಾಮ್ಯದ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಹೆಚ್ಚು ಅನುದಾನ ಕೊಡುವ ಸದಾಶಯ ಹೊಂದಿವೆ. ಆದರೆ, ಪರೋಕ್ಷವಾಗಿ ಖಾಸಗಿಯವರಿಗೆ ಅನುಕೂಲ ಮಾಡಿಕೊಡುವ ಅಂಶಗಳನ್ನು ಸೇರ್ಪಡೆ ಮಾಡಲಾಗಿದೆ’ ಎಂದು ನವದೆಹಲಿಯ ಜವಹರಲಾಲ್‌ ನೆಹರೂ ವಿಶ್ವವಿದ್ಯಾಲಯದ ಆರ್ಥಿಕ ಅಧ್ಯಯನ ಹಾಗೂ ಯೋಜನಾ ವಿಭಾಗದ ಪ್ರಾಧ್ಯಾಪಕ ಪ್ರೊ.ಸುರ್ಜಿತ್‌ ಮಜುಂದಾರ್ ಕಳವಳ ವ್ಯಕ್ತಪಡಿಸಿದರು.

ಭಾರತ ವಿದ್ಯಾರ್ಥಿ ಫೆಡರೇಶನ್‌ (ಎಸ್‌ಎಫ್‌ಐ) ಭಾನುವಾರ ಆಯೋಜಿಸಿದ್ದ ‘ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಅಪಾಯಗಳು’ ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ‘ಶಿಕ್ಷಣ ಕ್ಷೇತ್ರದಲ್ಲಿ ಖಾಸಗಿಯವರಿಗೆ ಲಾಭ ಮಾಡಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದು ಒಂದೆಡೆ ಹೇಳಿದರೆ, ಮತ್ತೊಂದೆಡೆ ಲಾಭ ರಹಿತ ಶಿಕ್ಷಣ ಸಂಸ್ಥೆಗಳಿಗೆ ಸ್ವಾಯತ್ತತೆ ನೀಡುವ ಪ್ರಸ್ತಾವ ಇದೆಯೆಂದು ನೀತಿಯಲ್ಲಿ ತಿಳಿಸಲಾಗಿದೆ’ ಎಂದರು.

‘ವಿಶ್ವವಿದ್ಯಾಲಯ ಧನಸಹಾಯ ಆಯೋಗದ (ಯುಜಿಸಿ) ಬದಲು ಇನ್ನು ಮುಂದೆ ಪ್ರಧಾನಮಂತ್ರಿ ಅಧ್ಯಕ್ಷ ಮತ್ತು ಮಾನವ ಸಂಪನ್ಮೂಲ ಸಚಿವರು ಕಾರ್ಯದರ್ಶಿಯಾದ ರಾಷ್ಟ್ರೀಯ ಶಿಕ್ಷಣ ಆಯೋಗವು ವಿಶ್ವವಿದ್ಯಾಲಯಗಳಿಗೆ ಸಂಬಂಧಿಸಿದ ತೀರ್ಮಾನಗಳನ್ನು ಕೈಗೊಳ್ಳಲಿದೆ. ವಿಶ್ವವಿದ್ಯಾಲಯಕ್ಕೆ ಹಣಕಾಸು, ಪ್ರಾಧ್ಯಾಪಕರ ನೇಮಕಾತಿ, ಹೊಸ ವಿಶ್ವವಿದ್ಯಾಲಯಗಳಿಗೆ ಅನುಮತಿ ನೀಡುವ ಅಧಿಕಾರ ಪಡೆಯಲಿದೆ. ಸೇವಾ ಜ್ಯೇಷ್ಠತೆ ಬದಿಗಿಟ್ಟು ಮೆರಿಟ್‌ ಆಧಾರದ ಮೇಲೆ ಬಡ್ತಿ ಮಾಡುವುದಾಗಿ ತಿಳಿಸಿದೆ. ಹಾಗಿದ್ದರೆ, ಮೆರಿಟ್‌ ನಿರ್ಧರಿಸಲು ಅನುಸರಿಸುವ ಮಾನದಂಡಗಳೇನು’ ಎಂದು ಪ್ರಶ್ನಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.