ಕಲಬುರಗಿ: ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮಳೆ, ಗಾಳಿ, ನೆರೆಯಿಂದ ನೆಲಕ್ಕುರುಳಿದ ವಿದ್ಯುತ್ ಟ್ರಾನ್ಸ್ಫಾರ್ಮರ್, ಕಂಬಗಳನ್ನು ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ಅಧ್ಯಕ್ಷ ಪ್ರವೀಣ ಪಾಟೀಲ ಹರವಾಳ ಗುರುವಾರ ಪರಿಶೀಲಿಸಿದರು.
ಜಿಲ್ಲೆಯ ಕಡಬೂರು, ಕಾಗಿಣಾ ಸೇತುವೆ ಮತ್ತು ರದ್ದೇವಾಡಗಿಗೆ ಭೇಟಿ ನೀಡಿದ ಅವರು ಅವುಗಳನ್ನು ದುರಸ್ತಿಪಡಿಸಿ ತಕ್ಷಣ ವಿದ್ಯುತ್ ಸಂಪರ್ಕ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಧಾರಾಕಾರ ಮಳೆಯಿಂದಾಗಿ ಸುಮಾರು 270 ಟ್ರಾನ್ಸ್ಫಾರ್ಮರ್ಗಳು ಮತ್ತು 700 ವಿದ್ಯುತ್ ಕಂಬಗಳು ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ವರದಿ ಮಾಡಿದ್ದಾರೆ. ಹಲವಾರು ಸ್ಥಳಗಳಲ್ಲಿ ಪ್ರವಾಹದ ನೀರು ಇನ್ನೂ ಸಂಪೂರ್ಣವಾಗಿ ಇಳಿಯದ ಕಾರಣ ಪುನಃಸ್ಥಾಪನೆ ಕಾರ್ಯಕ್ಕೆ ಅಡ್ಡಿಯಾಗಿದೆ, ಇದರಿಂದಾಗಿ ದುರಸ್ತಿ ಕಾರ್ಯಗಳು ಕಷ್ಟಕರವಾಗಿವೆ. ರೈತರು ಮತ್ತು ನಿವಾಸಿಗಳ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು’ ಎಂದರು.
‘ನೀರು ಕಡಿಮೆಯಾದ ನಂತರ ಎಲ್ಲಾ ಟಿಸಿ, ಕಂಬಗಳನ್ನು ದುರಸ್ತಿಗೊಳಿಸುವ ಕಾರ್ಯಗಳನ್ನು ಯುದ್ಧೋಪಾದಿಯಲ್ಲಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ರೈತರಿಗೆ ಪರಿಹಾರ ನೀಡುವುದು ಮತ್ತು ಸಾಧ್ಯವಾದಷ್ಟು ಬೇಗ ನಿರಂತರ ವಿದ್ಯುತ್ ಸರಬರಾಜು ಖಚಿತಪಡಿಸಿಕೊಳ್ಳುವುದು ನಮ್ಮ ಆದ್ಯತೆಯಾಗಿದೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.