ಕಲಬುರಗಿ: ಇಲ್ಲಿನ ಶರಣಬಸವೇಶ್ವರ ವಸತಿ ಪಬ್ಲಿಕ್ ಪ್ರೌಢ ಶಾಲಾ ವಿದ್ಯಾರ್ಥಿಗಳು ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಸೋಮವಾರ ಶಾಲೆಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪರಿಸರ ಜಾಗೃತಿ ಜಾಥಾ ನಡೆಸಿದರು.
ವಿದ್ಯಾರ್ಥಿಗಳು ಪರಿಸರಕ್ಕೆ ಸಂಬಂಧಿಸಿದಂತೆ ತಾಪಮಾನ ಏರಿಕೆ, ಕುಡಿಯುವ ನೀರಿನ ಕೊರತೆ ಹಾಗೂ ಹವಾಮಾನ ವೈಪರಿತ್ಯಗಳ ಕುರಿತು ಮಾಹಿತಿ ಇರುವ ಭಿತ್ತಿಪತ್ರಗಳನ್ನು ಪ್ರದರ್ಶನ ಮಾಡುವ ಮೂಲಕ ಜಾಗೃತಿ ಮೂಡಿಸಿದರು.
ಶರಣಬಸವೇಶ್ವರ ವಸತಿ ಪಬ್ಲಿಕ್ ಪ್ರೌಢ ಶಾಲೆಯಿಂದ ಪ್ರಾರಂಭವಾದ ಜಾಥಾ ಚರ್ಚ್, ಅರಣ್ಯ ಭವನ ರಸ್ತೆ, ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ತಲುಪಿತು. ಪರಿಸರ ಸಂರಕ್ಷಣೆ ನಿಟ್ಟಿನಲ್ಲಿ ಸಸಿ ನೆಡುವುದು, ಶಬ್ದ, ಪರಿಸರ, ನೀರು ಮಾಲಿನ್ಯ ತಡೆಗಟ್ಟುವ ಕುರಿತು ಹೆಚ್ಚುವರಿ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ ಅವರಿಗೆ ವಿದ್ಯಾರ್ಥಿಗಳು ಮನವಿ ಪತ್ರ ಸಲ್ಲಿಸಿದರು.
ಜಾಗೃತಿ ಜಾಥಾದಲ್ಲಿ ಪ್ರೌಢಶಾಲಾ ವಿಭಾಗದ ಸುಮಾರು 1,200 ವಿದ್ಯಾರ್ಥಿ–ವಿದ್ಯಾರ್ಥಿನಿಯರು, ಶಾಲೆಯ ಶಿಕ್ಷಕ ಸಿಬ್ಬಂದಿ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.