
ಕಲಬುರಗಿ: ಪ್ರತಿ ಕ್ವಿಂಟಲ್ ತೊಗರಿಗೆ ₹12,500 ಕನಿಷ್ಠ ಬೆಂಬಲ ಬೆಲೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆಯಿಂದ ನಡೆಯುತ್ತಿರುವ ಅಹೋರಾತ್ರಿ ಧರಣಿ ಶುಕ್ರವಾರವೂ ಮುಂದುವರಿದಿದೆ.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಟ್ರ್ಯಾಕ್ಟರ್ ಗಳು, ಎತ್ತಿನ ಬಂಡಿಗಳೊಂದಿಗೆ ಬೀಡು ಬಿಟ್ಟಿರುವ ಧರಣಿತರು, ರಾತ್ರಿಯಿಡೀ ಬಯಲಿನಲ್ಲೇ ಕಳೆದರು.
'ರೈತರ ಗೋಳು ಕೇಳದ ಸರ್ಕಾರಕ್ಕೆ ಧಿಕ್ಕಾರ, ರೈತರಿಗೆ ಬೆಲೆ ನಷ್ಟ ಪರಿಹಾರ ಕೊಡಲೇ ಬೇಕು, ಬೆಳೆ ವಿಮೆ ಮಂಜೂರು ಮಾಡಲೇಬೇಕು' ಎಂದು ಘೋಷಣೆ ಮುಂದುವರಿಸಿದ್ದಾರೆ.
ಮುಖಂಡರಾದ ಶರಣಬಸಪ್ಪ ಮಮಶೆಟ್ಟಿ, ಮೌಲಾ ಮುಲ್ಲಾ, ಭೀಮಾಶಂಕರ ಮಾಡಿಯಾಳ, ಸಿದ್ದು ಎಸ್.ಎಲ್. ಸೇರಿದಂತೆ ಹಲವರು ಧರಣಿಯಲ್ಲಿ ಪಾಲ್ಗೊಂಡಿದ್ದಾರೆ.
ಮುಖಂಡ ಶರಣಬಸಪ್ಪ ಮಮಶೆಟ್ಟಿ ಮಾತನಾಡಿ, ನಮ್ಮ ಅಹೋರಾತ್ರಿ ಹೋರಾಟದ ಭಾಗವಾಗಿ ಶುಕ್ರವಾರ ಮಧ್ಯಾಹ್ನ 2ಗಂಟೆ ಹೊತ್ತಿಗೆ ಟ್ರ್ಯಾಕ್ಟರ್, ಎತ್ತಿನಬಂಡಿ ಸಮೇತ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಲಾಗುವುದು. ನಮ್ಮ ನ್ಯಾಯ ಬದ್ಧ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಬೇಕು ' ಎಂದು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.