ಕಲಬುರ್ಗಿ: ಅವಿರೋಧವಾಗಿ ಎಲ್ಲ ಸದಸ್ಯರು ಆಯ್ಕೆಯಾಗುವ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿಗಾಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್ಡಿಬಿ)ಯಿಂದ ₹ 1 ಕೋಟಿ ವಿಶೇಷ ಅನುದಾನ ನೀಡಲಾಗುವುದು ಎಂದು ಘೋಷಣೆ ಮಾಡಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂಬ ಆರೋಪದ ಮೇರೆಗೆ ಮಂಡಳಿಯ ಅಧ್ಯಕ್ಷ ಹಾಗೂ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ವಿರುದ್ಧ ಇಲ್ಲಿನ ಬ್ರಹ್ಮಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾದರಿ ನೀತಿ ಸಂಹಿತೆ (ಎಂಸಿಸಿ) ನೋಡಲ್ ಅಧಿಕಾರಿಯಾಗಿರುವ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಸೂಚನೆ ಮೇರೆಗೆ ಕಲಬುರ್ಗಿ ತಹಶೀಲ್ದಾರ್ ಸಂಗಯ್ಯ ಸ್ವಾಮಿ ಅವರು ಪ್ರಕರಣ ದಾಖಲಿಸಿದ್ದಾರೆ.
‘ಜಿ.ಪಂ. ಸಿಇಒಅವರು ಡಿ. 15ರಂದು ನೋಟಿಸ್ ಜಾರಿಗೊಳಿಸಿದ್ದರು. ಅಂತಹ ಘೋಷಣೆ ಮಾಡಿಲ್ಲ ಎಂದು ದತ್ತಾತ್ರೇಯ ಪಾಟೀಲ ಲಿಖಿತ ಹೇಳಿಕೆ ನೀಡಿದ್ದರು. ಪತ್ರಿಕಾ ವರದಿಗಳನ್ನು ಪರಿಶೀಲನೆ ನಡೆಸಿದಾಗ ಅಧ್ಯಕ್ಷರು ಅಂತಹ ಘೋಷಣೆ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ’ ಎಂದು ತಹಶೀಲ್ದಾರರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಅನುದಾನ ಘೋಷಣೆ ಮಾಡುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿರುವ ಮಂಡಳಿ ಅಧ್ಯಕ್ಷರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ, ವಿಧಾನ ಪರಿಷತ್ ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ ಅವರು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದರು. ಈ ದೂರಿನ ಅನ್ವಯ ಕ್ರಮಕೈಗೊಳ್ಳುವಂತೆ ರಾಜ್ಯ ಚುನಾವಣಾ ಆಯೋಗ ಜಿಲ್ಲಾಧಿಕಾರಿಗೆ ಸೂಚಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.